ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಸುತ್ತಾಟ ಹಾಗೂ ಚುನಾವಣೆ ಬಳಿಕ ಎಲ್ಲ ಇಲಾಖೆಗಳ ಅಧಿಕಾರಿಗಳೊಡನೆ ಚರ್ಚೆ ನಡೆಸಿ ದಣಿದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ ರಾಜಧಾನಿ ಹೊರವಲಯದ ತುಮಕೂರು ರಸ್ತೆಯ ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿ ದಾಖಲಾಗಿದ್ದಾರೆ. ಪಂಜಾಬ್ನ ಲೂಧಿಯಾನದಲ್ಲಿ ಎನ್ಡಿಎ ಮೈತ್ರಿಕೂಟದ ಸಭೆಯಲ್ಲಿ ಭಾನುವಾರ ಭಾಗವಹಿಸಿ ಬೆಂಗಳೂರಿಗೆ ಇಂದು ಹಿಂದಿರುಗಿದ ಅವರು ವಿಶ್ರಾಂತಿಗಾಗಿ ಪ್ರಕೃತಿ ಚಿಕಿತ್ಸಾಲಯಕ್ಕೆ ತೆರಳಿದ್ದರು. 66ರ ಹರೆಯದ ಯಡಿಯೂರಪ್ಪ ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುವವರೆಗೆ ವಿಶ್ರಾಂತಿ ಹಾಗೂ ಕೆಲವೊಂದು ಚಿಕಿತ್ಸೆಯನ್ನು ಪಡೆಯಲಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಆರ್.ಪಿ.ಜಗದೀಶ್ ತಿಳಿಸಿದರು.ಮುಖ್ಯಮಂತ್ರಿಗಳು ಮೇ 14ರವರೆಗೆ ಚಿಕಿತ್ಸೆ ಪಡೆಯುವ ಸಾಧ್ಯತೆ ಇರುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು. ದಕ್ಷಿಣ ಭಾರತದಲ್ಲಿ ಮೊತ್ತ ಮೊದಲ ಬಾರಿಗೆ ಕರ್ನಾಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಹಿಡಿದಿದ್ದು, ಪ್ರಸಕ್ತ ಸಾಲಿನ ರಾಜ್ಯದ 28 ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲಿಸುವ ಪಣ ತೊಟ್ಟಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಾದ್ಯಂತ 250ಕ್ಕೂ ಹೆಚ್ಚಿನ ಪ್ರಚಾರ ಕಾರ್ಯಗಳಲ್ಲಿ ಬಿಡುವಿಲ್ಲದೆ ಪಾಲ್ಗೊಂಡಿದ್ದರು. |