ಕೃಷಿಕರಲ್ಲದವರು ಕೃಷಿ ಭೂಮಿಯನ್ನು ಖರೀದಿಸಲು ವಿಧಿಸಿರುವ ನಿರ್ಬಂಧ ಸಡಿಲಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಹೇಳಿದ್ದಾರೆ.
ಅದೇ ರೀತಿ ಕೃಷಿ ಭೂಮಿಯನ್ನು ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಂಬಂಧ ಭೂ ಪರಿವರ್ತನೆ ನಿಯಮಗಳನ್ನು ಸರಳಿಕರಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.
ಆರ್ಥಿಕ ಹಿಂಜರಿತನದಿಂದ ಸರ್ಕಾರಕ್ಕೆ ಬರಬೇಕಾದ ತೆರಿಗೆ ವರಮಾನ ಪ್ರಮಾಣ ಕಡಿಮೆಯಾಗಿದೆ. ಜತೆಗೆ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಸಂಗ್ರಹದಲ್ಲೂ ಇಳಿಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಕೃಷಿ ಭೂಮಿ ಖರೀದಿ ಹಾಗೂ ಭೂ ಪರಿವರ್ತನೆ ನಿಯಮಗಳ ಬದಲಾವಣೆಗೆ ಸರ್ಕಾರ ಮುಂದಾಗಿದೆ. ಈ ಬಗ್ಗೆ ಮುಂದಿನ ವಾರ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ನಗರ ಪ್ರದೇಶಗಳಲ್ಲಿ ಸರ್ಕಾರ ನಿಗದಿಪಡಿಸುವ ಶುಲ್ಕ ಪಾವತಿಸಿದರೆ ಭೂ ಪರಿವರ್ತನೆಗೆ ಅವಕಾಶ ನೀಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಟಿಸುವ ಉದ್ದೇಶದಿಂದ ಎರಡು ಎಕರೆವರೆಗೆ ಭೂ ಪರಿವರ್ತನೆ ಮಾಡುವ ಅಧಿಕಾರವನ್ನು ಗ್ರಾಮ ಪಂಚಾಯ್ತಿಗಳಿಗೆ ನೀಡುವ ಚಿಂತನೆ ನಡೆದಿದೆ ಎಂದರು.
ಕೃಷಿ ಭೂಮಿಯನ್ನು ಕೃಷಿಯೇತರರು ಖರೀದಿಸಲು ಅವಕಾಶ ಮಾಡಿಕೊಟ್ಟರೆ ರಿಯಲ್ ಎಸ್ಟೇಟ್ ಮಾಫಿಯಾಕ್ಕೆ ಅನುಕೂಲ ಮಾಡಿಕೊಟ್ಟಂತಾಗುತ್ತದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಆಚಾರ್ಯ ಈ ಸಂದರ್ಭದಲ್ಲಿ ಹೇಳಿದರು. |