ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಒಂದೆಡೆ ಕುಮಾರಸ್ವಾಮಿ ಹರಸಾಹಸ ಪಡುತ್ತಿದ್ದಾರೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಮಾರಸ್ವಾಮಿಯವರ ಆಸೆ ಭಗ್ನಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಭೇಟಿಯಾಗಲು ದೆಹಲಿಗೆ ಪ್ರಯಾಣ ಬೆಳೆಸುತ್ತಿದ್ದಾರೆ.ಜೆಡಿಎಸ್ ತೊರೆದ ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದವರೊಂದಿಗೆ ಶತೃತ್ವ ಕಟ್ಟಿಕೊಂಡಿರುವ ಸಿದ್ದರಾಮಯ್ಯ ಅವರು ಕೇಂದ್ರದಲ್ಲಿ ಜೆಡಿಎಸ್ಗೆ ಸಚಿವ ಸ್ಥಾನ ನೀಡುವ ಅಗತ್ಯವಿಲ್ಲ, ಸಚಿವ ಸ್ಥಾನ ಕೊಡುವ ಅನಿವಾರ್ಯತೆಯೂ ಇಲ್ಲ ಎಂದು ಕಾಂಗ್ರೆಸ್ ವರಿಷ್ಠರಿಗೆ ಮನವರಿಕೆ ಮಾಡಿಕೊಡಲು ದೆಹಲಿಗೆ ಹೊರಟಿದ್ದಾರೆ ಎನ್ನಲಾಗುತ್ತಿದೆ.ಲೋಕಸಭಾ ಚುನಾವಣೆಗೂ ಮುನ್ನ ತೃತೀಯ ರಂಗದೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದ ಜೆಡಿಎಸ್ ಫಲಿತಾಂಶ ಪ್ರಕಟವಾದ ಬಳಿಕ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಸಚಿವ ಸ್ಥಾನಕ್ಕೆ ಪ್ರಯತ್ನಿಸುತ್ತಿರುವುದು ಜೆಡಿಎಸ್ ಪಕ್ಷದ ಅವಕಾಶವಾದಿ ರಾಜಕಾರಣಕ್ಕೆ ನಿದರ್ಶನ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಯಾವುದೇ ಕಾರಣಕ್ಕೂ ದೇವೇಗೌಡ ಹಾಗೂ ಅವರ ಪುತ್ರ ಕುಮಾರಸ್ವಾಮಿಯವರನ್ನು ನಂಬಲೇಬಾರದು. ಅವರು ರಾಜಕೀಯ ಕುತಂತ್ರಿಗಳು ಎಂದು ವಿರೋಧ ವ್ಯಕ್ತಪಡಿಸಿದ್ದಾರೆ. |