ಇತ್ತೀಚಿಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಿಂದ ಆಯ್ಕೆಗೊಂಡ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸುವ ಮೂಲಕ ಲೋಕಸಭೆಯಲ್ಲಿ 'ಕನ್ನಡದ ಕಹಳೆಯನ್ನು' ಮೊಳಗಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಎಲ್ಲಾ 28 ಸಂಸದರನ್ನು ಆಗ್ರಹಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡ, ನಮ್ಮ ಎಲ್ಲಾ ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಬೇಕು. ನಮ್ಮ ಭಾಷೆಗೂ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದೆ. ಕನ್ನಡದ ಧ್ವನಿಯಾಗುವ ಮೂಲಕ ಹಿಂದಿ ಭಾಷೆಗಿಂತ ನಮ್ಮ ಭಾಷೆ ಕಮ್ಮಿಯಿಲ್ಲ ಎಂದು ಸಾಬೀತುಪಡಿಸಿ ಎಂದು ಒತ್ತಾಯಿಸಿದ್ದಾರೆ.
ಸಂಸತ್ತಿನಲ್ಲಿ ಉತ್ತರ ಭಾರತೀಯರ ಪ್ರಾಬಲ್ಯ ಹೆಚ್ಚಾಗುತ್ತಿದೆ. ಕರ್ನಾಟಕ ಮತ್ತು ಕನ್ನಡ ಭಾಷೆಯ ಶ್ರೇಯೋಭಿವೃದ್ದಿ ಉದಾಸೀನತೆಗೆ ಒಳಗಾಗುತ್ತಿದೆ. ನಮ್ಮ ಭಾಷೆಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ಸಿಕ್ಕಿದ್ದರೂ ಮದ್ರಾಸ್ ಹೈಕೋರ್ಟ್ನಲ್ಲಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಿಂದಾಗಿ ಇದುವರೆಗೆ ಯಾವುದೇ ಅನುದಾನ ಬಿಡುಗಡೆಯಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದ ಎಲ್ಲಾ ಸಂಸದರು ಈ ಬಗೆಯ ಸಮಸ್ಯೆಗಳ ನಿವಾರಣೆಗೆ ಶ್ರಮಿಸಬೇಕೆಂದು ಮನವಿ ಮಾಡಿಕೊಂಡಿದ್ದಾರೆ. |