ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚಿನ ಸ್ಥಾನದಲ್ಲಿ ಜಯಗಳಿಸಿರುವುದರಿಂದ ತಮ್ಮ ಸ್ಥಾನಕ್ಕೆ ಯಾವುದೇ ಸಂಚಕಾರವಿಲ್ಲ ಎಂಬ ವಿಶ್ವಾಸವನ್ನು ಕ್ರೀಡಾ ಹಾಗೂ ಜವಳಿ ಖಾತೆ ಸಚಿವ ಗೂಳಿಹಟ್ಟಿ ಶೇಖರ್ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಸಚಿವ ಸ್ಥಾನಕ್ಕೆ ಕುತ್ತು ಬರಲು ಸಾಧ್ಯವಿಲ್ಲ. ಅಂತಹ ಪರಿಸ್ಥಿತಿ ಉದ್ಭವಿಸುವುದಿಲ್ಲ. ಅವಧಿ ಮುಗಿಯುವವರೆಗೆ ಮುಂದುವರಿಯುತ್ತೇನೆ ಎಂದು ಹೇಳಿದರು.
ಚಿಕ್ಕಮಗಳೂರು ಸೇರಿದಂತೆ ರಾಜ್ಯದ 10 ಕಡೆಗಳಲ್ಲಿ ತಲಾ 50 ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾ ವಸತಿ ಶಾಲೆ ಕಟ್ಟಡಗಳನ್ನು, 10 ಕೋಟಿ ರೂ, ವೆಚ್ಚದಲ್ಲಿ ಮೈಸೂರು, ಮಂಗಳೂರು, ಉಡುಪಿ ಹಾಗೂ ಧಾರವಾಡದಲ್ಲಿ ಸಿಂಥೆಟಿಕ್ ಟ್ರ್ಯಾಕ್ ನಿರ್ಮಿಸಲು ನಿರ್ಧರಿಸಲಾಗಿದೆ ಎಂದರು.
ಆವಳಿ ನೀತಿ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ತರಬೇತಿ ಕೇಂದ್ರ ತೆರೆಯಲಾಗುತ್ತದೆ. 17 ಸಾವಿರ ಮಂದಿಗೆ ತರಬೇತಿ ನೀಡಲಾಗಿದ್ದು, 22 ಸಾವಿರ ಮಂದಿಗೆ ತರಬೇತಿ ನೀಡುವ ಗುರಿ ಇದೆ ಎಂದು ಹೇಳಿದರು. |