ಕೇಂದ್ರ ಸಚಿವ ಸಂಪುಟದಲ್ಲಿ ಈ ಬಾರಿ ರಾಜ್ಯಕ್ಕೆ ಸೂಕ್ತ ಪ್ರಾತಿನಿಧ್ಯ ಸಿಗುವ ವಿಶ್ವಾಸವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ವ್ಯಕ್ತಪಡಿಸಿದ್ದಾರೆ.
ಕಳೆದ ಬಾರಿ ಯುಪಿಎ ಸರ್ಕಾರದಲ್ಲಿ ರಾಜ್ಯ ಸಂಸದರಿಗೆ ಕ್ಯಾಬಿನೆಟ್ ದರ್ಜೆ ಸಚಿವ ಸ್ಥಾನಮಾನ ಸಿಕ್ಕಿರಲಿಲ್ಲ. ಹಿಂದೆ ಆಗಿರುವ ಅನ್ಯಾಯವನ್ನು ಗಮನದಲ್ಲಿಟ್ಟುಕೊಂಡು ಹೈಕಮಾಂಡ್ ಸೂಕ್ತ ನಿರ್ಣಯ ಕೈಗೊಳ್ಳುವ ವಿಶ್ವಾಸ ನನಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ತಾನು ಎರಡು ದಿನಗಳಿಂದ ಬೆಂಗಳೂರಿನಲ್ಲೇ ಇದ್ದು, ದೆಹಲಿಯಲ್ಲಿ ನಡೆಯುತ್ತಿರುವ ಚಟುವಟಿಕೆಗಳ ಬಗ್ಗೆ ಏನೂ ಗೊತ್ತಿಲ್ಲ ಎಂದರು. ಒಂದು ವೇಳೆ ಹೈಕಮಾಂಡ್ ಸಚಿವ ಸ್ಥಾನದ ಜವಾಬ್ದಾರಿ ವಹಿಸಿದರೆ ನಿರ್ವಹಿಸುತ್ತೀರಾ ಎಂಬ ಪ್ರಶ್ನೆಗೆ ನಗುವನ್ನೇ ಉತ್ತರವನ್ನಾಗಿಸಿದರು.
ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ನಿರೀಕ್ಷಿತ ಫಲಿತಾಂಶ ಬಂದಿಲ್ಲ. ಸೋಲಿಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲು ಕೆಪಿಸಿಸಿ ಅಧ್ಯಕ್ಷ ಆರ್.ವಿ.ದೇಶಪಾಂಡೆ ಸಮಿತಿಯೊಂದನ್ನು ನೇಮಕ ಮಾಡಿದ್ದಾರೆ. ಸಮಿತಿ ಸೋಲಿಗೆ ಕಾರಣಗಳನ್ನು ಪತ್ತೆ ಹಚ್ಚಲಿದೆ ಎಂದರು. ಹಲವು ಪಕ್ಷಗಳು ಯುಪಿಎಗೆ ಬೇಷರತ್ ಬೆಂಬಲ ನೀಡಿದೆ. ಅದರಲ್ಲಿ ಜೆಡಿಎಸ್ ಕೂಡಾ ಸೇರಿದೆ. ಅದಕ್ಕಿಂತ ಹೆಚ್ಚಿನದ್ದೇನೂ ಇಲ್ಲ ಎಂದು ಹೇಳಿದರು. |