ತಿರುವಳ್ಳವರ್ ಪ್ರತಿಮೆ ಅನಾವರಣ ಕುರಿತಂತೆ ಕನ್ನಡ ಪರ ಸಂಘಟನಗಳು ತೀವ್ರ ವಿರೋಧ ವ್ಯಕ್ತಪಡಿಸಿರುವ ಹಿನ್ನೆಯಲ್ಲಿ ಶುಕ್ರವಾರದಿಂದ ಭಾನುವಾರದವರೆಗೆ ನಗರದಾದ್ಯಂತ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕನ್ನಡಪರ ಸಂಘಟನೆಗಳು ಅನುಮತಿ ಪಡೆದ ಸ್ಥಳ ಮತ್ತು ದಾರಿಯಲ್ಲೇ ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಬೇಕು. ಇಲ್ಲವಾದಲ್ಲಿ ಸೆಕ್ಷನ್ 103ರ ಅಡಿಯಲ್ಲಿ ಬಂಧಿಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಕನ್ನಡಪರ ಸಂಘಟನೆಗಳು ಆಗಸ್ಟ್ 9ರಂದು ಹಲಸೂರಿಗೆ ಭಾರಿ ಮೆರವಣಿಗೆಯಲ್ಲಿ ಬಂದರೆ ಕೆಲವು ಸಂಘಟನೆಗಳು ಮುನ್ನಾ ದಿನದಂದೇ ಪ್ರತಿಮೆ ಅನಾವರಣ ಪ್ರದೇಶದಲ್ಲಿ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕದಡದಂತೆ ನೋಡಿಕೊಳ್ಳಲು ಹಿರಿಯ ಪೋಲಿಸ್ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಲಾಗಿದೆ ಎಂದು ಬಿದರಿ ಹೇಳಿದರು.
ಶುಕ್ರವಾರದಂದು ಕನ್ನಡ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಮತ್ತು ಕನ್ನಡ ಚಳವಳಿ ವಾಟಾಳ್ ಪಕ್ಷದ ಕಾರ್ಯಕರ್ತರು ಕೆಂಪೇಗೌಡ ಪ್ರತಿಮೆಯಿಂದ ರಾಜಭವನದವರೆಗೆ ಮೆರವಣಿಗೆ ನಡೆಸುವುದಾಗಿ ತಿಳಿಸಿದೆ.. ಇನ್ನೊಂದು ಕರವೇ ಬಣ (ನಾರಾಯಣ ಗೌಡ) ಜೆ.ಸಿ. ರಸ್ತೆಯಲ್ಲಿರುವ ಕನ್ನಡ ಭವನದ ಮುಂದೆ ಪ್ರತಿಭಟನೆ ನಡೆಸಲಿದೆ. ಈ ಸಮಯದಲ್ಲಿ ಶಾಂತಿ ಸುವ್ಯವಸ್ಥೆಗೆ ತೊಂದರೆ ಬರದಂತೆ ಎಚ್ಚರ ವಹಿಸಲಾಗಿದೆ ಎಂದು ಬಿದರಿ ಹೇಳಿದ್ದಾರೆ.