ಮಕ್ಕಳ ಸಾವಿಗೆ ಕಾರಣವಾಗುತ್ತಿರುವ ಕೊಳವೆ ಬಾವಿಗಳನ್ನು ಮುಚ್ಚಲು ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.
ಉಪಯೋಗಕ್ಕೆ ಯೋಗ್ಯವಲ್ಲದ ಹಾಗೂ ಬತ್ತಿದ ಕೊಳವೆ ಬಾವಿಗಳನ್ನು ಮುಚ್ಚದ ಮಾಲೀಕರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರಿ ಶಿವಮೊಗ್ಗ ಜಿಲ್ಲೆಯ ಸಾಗರದ ಕೆ.ವಿ.ಪ್ರವೀಣಾ ಹಾಗೂ ಇತರರು ಕೋರ್ಟ್ ಅನ್ನು ಕೋರಿದ್ದರು.
ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯನ್ಯಾಯಮೂರ್ತಿ ಪಿ.ಡಿ.ದಿನಕರನ್ ಹಾಗೂ ನ್ಯಾಯಮೂರ್ತಿ ಮೋಹನ ಶಾಂತನಗೌಡರ್ ಅವರನ್ನು ಒಳಗೊಂಡ ವಿಭಾಗೀಯ ಪೀಠ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಸೋಮವಾರ ನೋಟಿಸ್ ಜಾರಿಗೆ ಆದೇಶಿಸಿದೆ.
ರಾಜ್ಯದ ಅನೇಕ ಕಡೆಗಳಲ್ಲಿ, ಅದರಲ್ಲೂ ಮುಖ್ಯವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಕೊಳವೆ ಬಾವಿಗಳ ಸಂಖ್ಯೆ ಹೆಚ್ಚಾಗಿದೆ. ದನ ಮೇಯಿಸಲು ಹೋಗುವವರ ಸಂಖ್ಯೆ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿರುವ ಕಾರಣ, ಅಂಥವರು ಇದಕ್ಕೆ ಬಲಿಯಾಗುತ್ತಿದ್ದಾರೆ ಎಂದು ಅರ್ಜಿದಾರರ ಪರ ವಕೀಲ ಶಂಕರ ಭಟ್ ಅವರು ಪೀಠದ ಗಮನಕ್ಕೆ ತಂದರು.
ಇತ್ತೀಚೆಗೆ ವಿಜಾಪುರ ಜಿಲ್ಲೆಯ ದೇವರ ನಿಂಬರಿಗಿಯಲ್ಲಿ ಸಾವನ್ನಪ್ಪಿರುವ ಕಾಂಚನಾ ಸೇರಿದಂತೆ ತೆರೆದ ಕೊಳವೆ ಬಾವಿಗಳಿಗೆ ಬಿದ್ದು ಸಾವನ್ನಪ್ಪಿದ ಅನೇಕ ಮಕ್ಕಳ ಬಗ್ಗೆ ಅವರು ವಿವರಿಸಿದರು.