ಇನ್ನು ಮುಂದೆ ಬಿಬಿಎಂಪಿ ಸದಸ್ಯರಾಗಲು ಬಯಸಿದವರಿಗೆ ಇಲ್ಲೊಂದು ಕಹಿ ಸುದ್ದಿಯಿದೆ. ಪಾಲಿಕೆ ಸದಸ್ಯರು ಮುಂದಿನ ದಿನಗಳಲ್ಲಿ ಲೋಕಾಯುಕ್ತರಿಗೆ ಆಸ್ತಿ ವಿವರ ಸಲ್ಲಿಸುವ ಕಾಯ್ದೆಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಲೋಕಾಯುಕ್ತರಿಗೆ ಪತ್ರ ಬರೆದಿದೆ.
ಇದಕ್ಕಾಗಿ ಲೋಕಾಯುಕ್ತ ಕಾಯ್ದೆಗೆ ತಿದ್ದುಪಡಿ ತರಬೇಕಾಗಿದ್ದು, ಸರ್ಕಾರ ಸಕಾರಾತ್ಮವಾಗಿ ಸ್ಪಂದಿಸುತ್ತಿದೆ. ಸದ್ಯದಲ್ಲೇ ಇದು ಅನುಷ್ಠಾನಗೊಳ್ಳುವ ವಿಶ್ವಾಸವಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ತಿಳಿಸಿದ್ದಾರೆ.
ಇದು ಎಲ್ಲಾ ಪಕ್ಷಗಳಿಗೂ ಅನ್ವಯವಾಗುವುದರಿಂದ ಸರ್ಕಾರ ಸುಗ್ರೀವಾಜ್ಞೆ ಮೂಲಕವೇ ಜಾರಿಗೊಳಿಸಬಹುದಾಗಿದೆ. ಒಂದು ವೇಳೆ ಸರ್ಕಾರ ಹಿಂದೇಟು ಹಾಕಿದರೆ ಅದನ್ನು ಪ್ರಶ್ನಿಸದೇ ಬಿಡುವುದಿಲ್ಲ ಎಂದು ಹೆಗ್ಡೆ ಎಚ್ಚರಿಕೆ ನೀಡಿದ್ದಾರೆ.