ಆಡಳಿತಾರೂಢ ಬಿಜೆಪಿ ಮತ್ತು ಪ್ರತಿಪಕ್ಷಗಳ ಮುಖಂಡರ ನಡುವಿನ ರಾಜಕೀಯ ಕೆಸರೆರಚಾಟ ಮುಂದುವರಿದಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ನಾಲಿಗೆಗೆ ಮೂಳೆ ಇದೆಯಾ?ಎಂದು ವಿರೋಧ ಪಕ್ಷದ ಮುಖಂಡ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ವಿಪಕ್ಷ ನಾಯಕರು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ನೋಡಿ ಸಹಿಸಿಕೊಳ್ಳಲಾಗದೆ ಅನಾವಶ್ಯಕವಾಗಿ ಆರೋಪ ಮಾಡುತ್ತಿವೆ. ಅಲ್ಲದೆ, ಎಲುಬಿಲ್ಲದ ನಾಲಿಗೆ ಏನು ಬೇಕಾದ್ರೂ ಹೇಳುತ್ತೆ ಎಂದು ಯಡಿಯೂರಪ್ಪ ವಿಪಕ್ಷಗಳ ಟೀಕೆಗೆ ಕಟುವಾಗಿ ಪ್ರತಿಕ್ರಿಯಿಸಿರುವ ವಿರುದ್ಧ ಸಿದ್ದು ಕಿಡಿಕಾರಿದ್ದಾರೆ.
ಪ್ರತಿಪಕ್ಷಗಳು ಅನಾವಶ್ಯಕವಾಗಿ ಟೀಕಿಸುತ್ತಿಲ್ಲ, ಭ್ರಷ್ಟಾಚಾರದ ಆಡಳಿತ ನಡೆಸುತ್ತಿರುವ ಆಡಳಿತಾರೂಢ ಸರ್ಕಾರದ ಬೇಜವಾಬ್ದಾರಿಯನ್ನು ಟೀಕಿಸಿದರೆ ಮುಖ್ಯಮಂತ್ರಿಗಳು ಅದನ್ನು ಗಂಭೀರವಾಗಿ ಪರಿಗಣಿಸದೆ ಲೇವಡಿ ಮಾಡುತ್ತಿರುವುದು ವಿಪರ್ಯಾಸ ಎಂದರು.
ಅಕ್ರಮ ಸಕ್ರಮ ಮಸೂದೆಯನ್ನು ರಾಜ್ಯಪಾಲರು ವಾಪಸ್ ಕಳುಹಿಸಿದರೆ ಅದಕ್ಕೆ ಕಾಂಗ್ರೆಸ್ ಕೈವಾಡ ಹೇಗೆ ಕಾರಣವಾಗುತ್ತೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಬಿಜೆಪಿಗೆ ಅಕ್ರಮ-ಸಕ್ರಮ ಯೋಜನೆ ಜಾರಿಯಾಗುವುದು ಬೇಕಿಲ್ಲ. ಆ ಕಾರಣಕ್ಕಾಗಿಯೇ ವಿಪಕ್ಷಗಳನ್ನು ಇಕ್ಕಟ್ಟಿಗೆ ಸಿಲುಕಿಸುವ ಯತ್ನದಲ್ಲಿ ಬಿಜೆಪಿ ಸರ್ಕಾರ ಮುಂದಾಗಿದೆ ಎಂದು ದೂರಿದರು.