ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರ ಸಂಘ ಸೋಮವಾರ ವಿಧಾನಸೌಧ ಮುತ್ತಿಗೆ ಕಾರ್ಯಕ್ರಮ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಇಂದು ಬೆಳಿಗ್ಗೆ 6ರಿಂದ ಮಧ್ಯರಾತ್ರಿ 12ರವರೆಗೆ ಕಲಂ 144ರ ಅನ್ವಯ ವಿಧಾನಸೌಧ ಸುತ್ತಲಿನ 1ಕಿಮೀ ವ್ಯಾಪ್ತಿಯೊಳಗೆ ನಿಷೇಧಾಜ್ಞೆ ಜಾರಿಗೊಳಿಸಿದೆ.
ಸಂಘದ ವತಿಯಿಂದ ವಿಧಾನಸೌಧದ ಮುಖ್ಯದ್ವಾರದ ಬಳಿ ಕಬ್ಬು ಬೆಳೆಗಾರರು ಹಾಗೂ ರೈತರು ಪ್ರತಭಟನೆ ನಡೆಸಿ ರಸ್ತೆ ತಡೆ ನಡೆಸುವುದಾಗಿ ರೈತ ಸಂಘಟನೆ ಘೋಷಿಸಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಅಂಗವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೇ, ಈ ಸಂದರ್ಭವನ್ನು ಉಪಯೋಗಿಸಿಕೊಳ್ಳುವ ಕೆಲವು ದುಷ್ಕರ್ಮಿಗಳು ಸಾರ್ವಜನಿಕ ಮತ್ತು ಸರ್ಕಾರಿ ಆಸ್ತಿ ಪಾಸ್ತಿಗೆ ಹಾನಿ ಮಾಡುವ ಸಂದರ್ಭಗಳು ಹೆಚ್ಚು ಇರುವುದರಿಂದ ವಿಧಾನಸೌಧ ಸುತ್ತ ಮುತ್ತ ನಿಷೇಧಾಜ್ಞೆ ಜಾರಿಮಾಡಲಾಗಿದೆ ಎಂದು ವಿವರಿಸಿದ್ದಾರೆ.