ಜೆಡಿಎಸ್ ತೊರೆದು ಬಿಎಸ್ಪಿ ಸೇರಿ, ಮರಳಿ ಜೆಡಿಎಸ್ ಗೂಡು ಸೇರಿರುವ ಹಿರಿಯ ಮುಖಂಡ ಪಿ.ಜಿ.ಆರ್.ಸಿಂಧ್ಯ ಅವರು ಜೆಡಿಎಸ್ ನೂತನ ರಾಜ್ಯ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಸಿಂಧ್ಯ ಅವರನ್ನು ಕಾರ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಿಂಧ್ಯ ಅವರಿಗೆ ವಿವಿಧ ಭಾಷೆಗಳ ಮೇಲೆ ಹಿಡಿತವಿದೆ. ಹೀಗಾಗಿ ಅವರನ್ನು ರಾಷ್ಟ್ರೀಯ ಮಟ್ಟದ ಸಂಘಟನೆಗೆ ಬಳಸಿಕೊಳ್ಳುವ ಉದ್ದೇಶವಿತ್ತು. ಆದರೆ, ನಮ್ಮ ಪಕ್ಷ ಅಷ್ಟೊಂದು ಬಲಿಷ್ಟವಾಗಿಲ್ಲದ ಕಾರಣ ಅವರ ಸೇವೆಯನ್ನು ರಾಜ್ಯಕ್ಕೆ ಮಾತ್ರ ಬಳಸಿಕೊಳ್ಳಲಾಗುತ್ತಿದೆ ಎಂದರು.
ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಅವರಿಗೂ ಪಕ್ಷದಲ್ಲಿ ಜವಾಬ್ದಾರಿಯುತ ಹುದ್ದೆ ನೀಡಲಾಗುವುದು. ಇದರ ಜೊತೆಗೆ ಇನ್ನಿತರ ಮುಖಂಡರುಗಳಿಗೂ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದರು.