ಅಭಿವೃದ್ಧಿ ನಿರ್ಲಕ್ಷಿಸಿದರೆ ಜನ ದಂಗೆ ಏಳ್ತಾರೆ: ರೇವಣ್ಣ ಎಚ್ಚರಿಕೆ
ಹಾಸನ, ಬುಧವಾರ, 20 ಜನವರಿ 2010( 17:45 IST )
ರಾಜ್ಯ ಬಿಜೆಪಿ ಸರ್ಕಾರ ಜಿಲ್ಲೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಹಾಸನ ಜಿಲ್ಲೆಯ ಜನರ ತಾಳ್ಮೆ, ಸಹನೆ ಪರೀಕ್ಷಿಸಬೇಡಿ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಎಚ್ಚರಿಸಿದ್ದಾರೆ.
ಸಾರಿಗೆ ಸಂಸ್ಥೆ, ತರಬೇತಿ ಅಕಾಡೆಮಿ ಕಟ್ಟಡ ಉದ್ಘಾಟನಾ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ನಿರ್ಲಕ್ಷಿಸಿದರೆ ಜನ ದಂಗೆ ಏಳುವರು. ಇದಕ್ಕೆ ಬಿಜೆಪಿ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ ಎಂದರು.
19ತಿಂಗಳಿನಿಂದ ಈ ಸರ್ಕಾರ ಏನು ಮಾಡುತ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಅಭಿವೃದ್ಧಿ ವಿಚಾರದಲ್ಲಿ ಬೇಧ, ಭಾವ ಮಾಡಬಾರದು. ರೈತರ ಹೆಸರಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರ ಪಡೆದರೂ ವಿವಿಧ ಕಡೆ ರೈತರ ಮೇಲೆ ಗೋಲಿಬಾರ್, ಲಾಠಿ ಚಾರ್ಜ್ ಮಾಡುವ ಮೂಲಕ ರೈತರ ವಿರೋಧಿ ಸರ್ಕಾರವಾಗಿದೆ ಎಂದು ಆರೋಪಿಸಿದರು.
ಹಲವು ವರ್ಷಗಳಿಂದ ಹಾಸನ ಜಿಲ್ಲೆಯ ರೈತರು ಆಲೂಗಡ್ಡೆ ಬೆಳೆ ಕಳೆದುಕೊಂಡು ಸಂಕಷ್ಟಕ್ಕೀಡಾಗಿದ್ದರೂ ಕೂಡ ರಾಜ್ಯ ಸರ್ಕಾರ ಗಮನ ಹರಿಸಿಲ್ಲ. ರೈತರ ಸಂಕಷ್ಟಕ್ಕೆ ಸ್ಪಂದಿಸದೆ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು.