ಬಿಜೆಪಿಗೆ ರಾಜ್ಯದಲ್ಲಿ ಆನೆಬಲ ತರುವ ನಿಟ್ಟಿನಲ್ಲಿ ಹಾಗೂ ಪಕ್ಷವನ್ನು ಸಮರ್ಥವಾಗಿ ಮುನ್ನೆಡೆಸುವ ಸಲುವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹುದ್ದೆಗೆ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರ ಆಯ್ಕೆ ಬಹುತೇಕ ಖಚಿತವಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.
ಹಾಲಿ ರಾಜ್ಯಾಧ್ಯಕ್ಷ ಡಿ.ವಿ.ಸದಾನಂದ ಗೌಡ ಅವರ ಅಧಿಕಾರಾವಧಿ ಮುಕ್ತಾಯಗೊಂಡಿದೆ. ಈ ಬಗ್ಗೆ ಬುಧ ರಾತ್ರಿ ಡಾಲರ್ಸ್ ಕಾಲೋನಿಯಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ನಡೆದ ಸಮನ್ವಯ ಸಮಿತಿ ಸಭೆಯಲ್ಲಿ ಈಶ್ವರಪ್ಪ ಅವರ ಆಯ್ಕೆ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷಗಿರಿಗೆ ಶಾಸಕ ಸಿ.ಟಿ.ರವಿ, ಅರಗ ಜ್ಞಾನೇಂದ್ರ, ಸಚಿವ ಅರವಿಂದ ಲಿಂಬಾವಳಿ ಹಾಗೂ ವಿಜಯ್ ಶಂಕರ್ ಅವರ ಹೆಸರು ಕೂಡ ಪ್ರಸ್ತಾಪವಾಗಿತ್ತು.
ಆದರೆ ರಾಜ್ಯ ಬಿಜೆಪಿಯಲ್ಲಿನ ಅಪಸ್ವರ, ಬಿಕ್ಕಟ್ಟನ್ನು ಸಮರ್ಥವಾಗಿ ನಿಭಾಯಿಸಲು ಹಿರಿಯ ಮುಖಂಡರ ಅಗತ್ಯವನ್ನು ಮನಗಂಡಿರುವ ಪಕ್ಷ ಈಶ್ವರಪ್ಪ ಅವರನ್ನು ನೇಮಕ ಮಾಡಲು ಒಲವು ತೋರಿದೆ ಎನ್ನಲಾಗಿದೆ.
ಈಶ್ವರಪ್ಪ ಅವರ ಆಯ್ಕೆಯನ್ನು ಜನವರಿ ಅಂತ್ಯದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಬೆಂಗಳೂರಿಗೆ ಆಗಮಿಸಿ ಅಧಿಕೃತವಾಗಿ ಘೋಷಿಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.