ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕೆಗಳ ಸ್ಥಾಪನೆ ಅತ್ಯಗತ್ಯ ಎಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೈಗಾರಿಕೆಗಳ ಅಭಿವೃದ್ಧಿಗೆ ಅಡ್ಡಿ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಪಟ್ಟಣದಲ್ಲಿ ಶುಕ್ರವಾರ ಮಲೆನಾಡು ಅಡಿಕೆ ಮಾರಾಟ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಕೈಗಾರಿಕೆಗಳ ಸ್ಥಾಪನೆಗೆ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವುದಿಲ್ಲ, ಕೃಷಿಗೆ ಯೋಗ್ಯವಲ್ಲದ ಭೂಮಿಯನ್ನು ವಶಕ್ಕೆ ಪಡೆದು ಕೈಗಾರಿಕೆ ಸ್ಥಾಪನೆ ಮಾಡಲಾಗುವುದು ಎಂದು ಹೇಳಿದರು.
ಕೃಷಿ ಭೂಮಿ ವಶಕ್ಕೆ ಸಂಬಂಧಿಸಿದಂತೆ ರೈತರನ್ನು ಸರ್ಕಾರದ ವಿರುದ್ಧ ಎತ್ತಿ ಕಟ್ಟುವ ಕೆಲಸವನ್ನು ಕೆಲವರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಅಭಿವೃದ್ಧಿ ಕಾರ್ಯದಲ್ಲಿ ಬೇಧ-ಭಾವ ಮಾಡುವುದಿಲ್ಲ, ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವುದಾಗಿ ತಿಳಿಸಿದರು.