ನೈಸ್ ಸಂಸ್ಥೆ ಮುಖ್ಯಸ್ಥ ಖೇಣಿ ವಿರುದ್ಧ ಮತ್ತೊಮ್ಮೆ ಗುಡುಗಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಖೇಣಿಗೆ ಬುದ್ದಿ ಕಲಿಸುವಂತೆ ಮಹಿಳೆಯರಿಗೆ ಕರೆ ನೀಡಿದ್ದಾರೆ. ನೈಸ್ ವಿರುದ್ಧ ಇದು ನನ್ನ ಕೊನೆ ಹೋರಾಟ. ಸಂತ್ರಸ್ತ ರೈತರೊಂದಿಗೆ ಸರ್ಕಾರ ನನ್ನನ್ನೂ ಜೈಲಿಗೆ ತಳ್ಳಿದರೂ ಚಿಂತೆಯಿಲ್ಲ. ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಅಲ್ಲದೇ, ನೈಸ್ ಸಂಸ್ಥೆ ವಿರುದ್ಧದ ತಮ್ಮ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಹೇಳಿದರು. ಬಿಎಂಐಸಿ ಕಾಮಗಾರಿ ಪ್ರದೇಶದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಭಾನುವಾರವೂ ಭೇಟಿ ನೀಡುವ ಮುನ್ನ ಪತ್ರಕರ್ತರೊಂದಿಗೆ ಮಾತನಾಡಿದರು.
ಮುಂದಿನ ಹತ್ತು ದಿನಗಳಲ್ಲಿ ನಮ್ಮ ಚಳವಳಿ ಉಗ್ರ ಸ್ವರೂಪ ಪಡೆಯಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರು-ಮೈಸೂರು ಇನ್ಪ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಎಲ್ಲಾ ಮಾಹಿತಿ ಒಳಗೊಂಡ ಸುದೀರ್ಘ ಪತ್ರ ಬರೆಯುವುದಾಗಿ ತಿಳಿಸಿದ ಗೌಡರು, ಹೊಸಕೆರೆಹಳ್ಳಿ-ಪಂತರಪಾಳ್ಯದಲ್ಲಿ 140 ಎಕರೆ ಭೂಮಿಯನ್ನು ಅಕ್ರಮವಾಗಿ ನೈಸ್ ಸಂಸ್ಥೆಗೆ ಹಸ್ತಾಂತರಿಸಲಾಗಿದೆ ಎಂದು ಆರೋಪಿಸಿದರು.