ಅಖಿಲ ಭಾರತ 10ನೇ ಶರಣ ಸಾಹಿತ್ಯ ಸಮ್ಮೇಳನ ಜ.30ರಂದು ಮುಂಬೈನ ಕರ್ನಾಟಕ ಸಂಘದಲ್ಲಿ ನಡೆಯಲಿದ್ದು, ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರೊ.ಜಿ.ಎನ್.ಸಿದ್ದಲಿಂಗಯ್ಯ ಅವರು ಸಮ್ಮೇಳನಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಮರಾಠಿಗರ ಮತ್ತು ಕನ್ನಡಿಗರ ನಡುವೆ ಭಾವನಾತ್ಮಕ ಸಂಬಂಧ ಬೆಳೆಸುವ ನಿಟ್ಟಿನಲ್ಲಿ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಈ ಬಾರಿ ಮುಂಬೈನಲ್ಲಿ ಶರಣ ಸಮ್ಮೇಳನ ಹಮ್ಮಿಕೊಂಡಿರುವುದಾಗಿ ಪರಿಷತ್ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನವನ್ನು ಅಂದು ಬೆಳಿಗ್ಗೆ 10-30ಕ್ಕೆ ಕೇಂದ್ರ ಸಚಿವ ಸುಶೀಲಕುಮಾರ್ ಶಿಂಧೆ ಅವರು ಉದ್ಘಾಟಿಸಲಿದ್ದಾರೆ. ಶಿವರಾತ್ರಿ ದೇಶೀಕೇಂದ್ರ ಶ್ರೀ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮತ್ತು ಕಾಡುಸಿದ್ದೇಶ್ವರ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಕರ್ನಾಟಕದ ಶರಣರು ಮತ್ತು ಮರಾಠಿ ಸಂತರನ್ನು ಕುರಿತ ಚಿಂತನಾ ಗೋಷ್ಠಿಗಳು ನಡೆಯಲಿದ್ದು, ಪರಿಷತ್ ಹೊರ ತಂದಿರುವ ಹೊಸ ಪುಸ್ತಕಗಳನ್ನು ಮಹಾರಾಷ್ಟ್ರ ಸರ್ಕಾರದ ಮಾಜಿ ಸಚಿವ ವಿನಯ್ ಕೋರೆ ಬಿಡುಗಡೆ ಮಾಡಲಿದ್ದಾರೆ ಎಂದರು.
ಜ.31ರಂದು ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳಲಿದ್ದು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅಂತ್ಯಗೊಳ್ಳಲಿದೆ ಎಂದು ತಿಳಿಸಿದರು.