ಸಚಿವ ಸ್ಥಾನ ತ್ಯಾಗ ಮಾಡಿ ಪಕ್ಷದ ಹಿತದೃಷ್ಟಿಯಿಂದ ಅಧ್ಯಕ್ಷ ಹುದ್ದೆ ಒಪ್ಪಿಕೊಂಡ ಈಶ್ವರಪ್ಪನವರ ನಿಲುವು ಎಲ್ಲರಿಗೂ ಮೇಲ್ಪಂಕ್ತಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರಪ್ಪನವರನ್ನು ಅಭಿನಂದಿಸಿ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಅಭಿವೃದ್ಧಿಯನ್ನು ಸಹಿಸದೆ ವಿರೋಧ ಪಕ್ಷಗಳು ರಾಜ್ಯದಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನಗಳನ್ನು ನಡೆಸಿರುವಾಗ ಅವರಿಗೆ ಸಮರ್ಥವಾಗಿ ಪ್ರತ್ಯುತ್ತರ ನೀಡಲು ಈಶ್ವರಪ್ಪ ಆಯ್ಕೆ ನೆರವಾಗಲಿದೆ ಎಂದರು.
ಬಿಜೆಪಿ ಅಧ್ಯಕ್ಷರಾಗಿ ಈಶ್ವರಪ್ಪನವರ ಆಯ್ಕೆ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಸಂತಸ ತಂದಿದ್ದು, ಪಕ್ಷ ಈಶ್ವರಪ್ಪನವರ ನೇತೃತ್ವದಲ್ಲಿ ಮತ್ತಷ್ಟು ಸದೃಢವಾಗಲಿದೆ ಎಂದು ತಿಳಿಸಿದರು. ಪಕ್ಷ ಹಾಗೂ ಸರ್ಕಾರ ಪೂರಕವಾಗಿ ಕೆಲಸ ಮಾಡುವ ಮೂಲಕ ರಾಜ್ಯದ ಅಭಿವೃದ್ಧಿಗೆ ಒಟ್ಟಾಗಿ ದುಡಿಯುವುದಾಗಿ ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಹೇಳಿದರು.