ಚರ್ಚ್, ಪ್ರಾರ್ಥನಾ ಮಂದಿರ, ದೇವಾಲಯಗಳ ಮೇಲೆ ದಾಳಿ ನಡೆಸಬಾರದು ಎಂಬ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಎಚ್ಚರಿಕೆಯ ನಡುವೇಯೇ, ಚರ್ಚ್ವೊಂದಕ್ಕೆ ಬೆಂಕಿ ಹಚ್ಚಿದ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನ ಸೂಳೇನೂರಿನಲ್ಲಿ ನಡೆದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಚಿತ್ರದುರ್ಗದ ಮೊಳಕಾಲ್ಮೂರಿನಲ್ಲಿನ ಚರ್ಚ್ವೊಂದಕ್ಕೆ ಬೆಂಕಿ ಹಚ್ಚಿರುವ ಘಟನೆ ನಡೆದಿರುವುದಾಗಿ ತಿಳಿಸಿರುವ ಅಧಿಕಾರಿಗಳು, ಇದು ಕಿಡಿಗೇಡಿಗಳ ಕೃತ್ಯ ಎಂದು ಶಂಕಿಸಿದ್ದಾರೆ.
ದುಷ್ಕೃತ್ಯ ನಡೆಸಿದವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಠಿಣ ಕ್ರಮ ಕೈಗೊಳ್ಳಿ-ರಾಜ್ಯಪಾಲ ಭಾರದ್ವಾಜ್: ರಾಜ್ಯದಲ್ಲಿ ಚರ್ಚ್ಗಳ ಮೇಲಿನ ದಾಳಿ ಮುಂದುವರಿದಿದೆ. ಇದರಿಂದಾಗಿ ಕೋಮುಸಾಮರಸ್ಯಕ್ಕೆ ಧಕ್ಕೆ ಬಂದಿರುವುದಾಗಿ ಆರೋಪಿಸಿರುವ ರಾಜ್ಯಪಾಲ ಭಾರದ್ವಾಜ್, ಕಿಡಿಗೇಡಿಗಳ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು. ಅಲ್ಲದೇ, ಪ್ರಾರ್ಥನಾ ಮಂದಿರಗಳಿಗೆ ಸೂಕ್ತ ರಕ್ಷಣೆ ನೀಡಬೇಕೆಂದು ಅವರು ಸಲಹೆ ನೀಡಿದ್ದಾರೆ.
ಮಂದಿರ, ಮಸೀದಿ, ಚರ್ಚ್ಗಳ ಮೇಲೆ ದಾಳಿ ನಡೆಸುವವರನ್ನು ಕಂಡಲ್ಲಿ ಸಾರ್ವಜನಿಕರು ಅಂತಹವರ ಕೈ ಕತ್ತರಿಸಬೇಕು ಎಂದು ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆ ನೀಡಿದ್ದರು. ಅಲ್ಲದೇ, ಮುಖ್ಯಮಂತ್ರಿಗಳ ಈ ಹೇಳಿಕೆ ತೀವ್ರ ವಿವಾದಕ್ಕೆ ಒಳಗಾಗಿತ್ತು. ಅವೆಲ್ಲ ಎಚ್ಚರಿಕೆಯ ನಡುವೆಯೂ ರಾಜ್ಯದಲ್ಲಿ ಚರ್ಚ್ಗಳ ಮೇಲಿನ ದಾಳಿ ಮುಂದುವರಿದಿದೆ.