ಮುಖ್ಯಮಂತ್ರಿ ಹೇಳಿಕೆ ಫ್ಯಾಸಿಸ್ಟ್ ಸಂಸ್ಕೃತಿಯದ್ದು: ಸಿದ್ದರಾಮಯ್ಯ
ತುಮಕೂರು, ಶುಕ್ರವಾರ, 29 ಜನವರಿ 2010( 16:01 IST )
NRB
ರಾಜ್ಯದಲ್ಲಿನ ಚರ್ಚ್, ಮಸೀದಿ, ಪ್ರಾರ್ಥನಾ ಮಂದಿರಗಳ ಮೇಲೆ ದಾಳಿ ನಡೆಸುವ ದುಷ್ಕರ್ಮಿಗಳ ಕೈ ಕಡಿಯಿರಿ ಎನ್ನುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ಫ್ಯಾಸಿಸ್ಟ್ ಸಂಸ್ಕೃತಿಯದ್ದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜವಾಬ್ದಾರಿಯುತ ಹುದ್ದೆಯಲ್ಲಿರುವ ಮುಖ್ಯಮಂತ್ರಿಗಳು ಬಹಿರಂಗವಾಗಿ ಇಂತಹ ಹೇಳಿಕೆ ನೀಡುವ ಮೂಲಕ ಹಿಂಸೆಗೆ ಪ್ರಚೋದನೆ ನೀಡಿದಂತಾಗುತ್ತದೆ. ಆ ನಿಟ್ಟಿನಲ್ಲಿ ಮುಖ್ಯಮಂತ್ರಿ ವಿರುದ್ಧ ದೂರು ದಾಖಲಿಸಬೇಕು ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಚರ್ಚ್, ಮಸೀದಿಗಳ ಮೇಲೆ ನಿರಂತರವಾಗಿ ದಾಳಿ ನಡೆಯುತ್ತಿವೆ. ಅಲ್ಲದೇ ಕಿಡಿಗೇಡಿಗಳ ವಿರುದ್ಧ ಯಾವುದೇ ಕಠಿಣ ಕ್ರಮವನ್ನೂ ಕೈಗೊಳ್ಳುತ್ತಿಲ್ಲ. ಪರೋಕ್ಷವಾಗಿ ಬಿಜೆಪಿ ಸರ್ಕಾರ ಅಂತಹ ದುಷ್ಕರ್ಮಿಗಳಿಗೆ ಬೆಂಬಲ ನೀಡುತ್ತಿದೆ ಎಂದು ದೂರಿದರು.
ಆದರೆ ಮುಖ್ಯಮಂತ್ರಿಗಳು ಅನಾವಶ್ಯಕವಾಗಿ ಪ್ರತಿಪಕ್ಷಗಳ ಮೇಲೆ ಗೂಬೆ ಕೂರಿಸುವ ಪ್ರಯತ್ನ ನಡೆಸುತ್ತಿದ್ದಾರೆ ಎಂದರು. ಚರ್ಚ್ ದಾಳಿ ಕುರಿತಂತೆ ಸಮಗ್ರ ತನಿಖೆ ನಡೆಸಿ, ಆರೋಪಿಗಳಿಗೆ ತಕ್ಕ ಶಿಕ್ಷೆ ನೀಡಬೇಕು ಎಂದು ಈ ಸಂದರ್ಭದಲ್ಲಿ ಒತ್ತಾಯಿಸಿದರು.