ಫೆ.15ರಿಂದ ಮತ್ತೆ ಮುಷ್ಕರ: ವೈದ್ಯಾಧಿಕಾರಿ ಸಂಘದ ಎಚ್ಚರಿಕೆ
ಬೆಂಗಳೂರು, ಶನಿವಾರ, 30 ಜನವರಿ 2010( 17:21 IST )
ವೈದ್ಯಾಧಿಕಾರಿಗಳ ಬೇಡಿಕೆ ಅಧಿಕೃತವಾಗಿ ಈಡೇರದ ಹಿನ್ನೆಲೆಯಲ್ಲಿ ಫೆಬ್ರುವರಿ 15ರಿಂದ ಮತ್ತೊಮ್ಮೆ ಮುಷ್ಕರ ನಡೆಸುವುದಾಗಿ ಕರ್ನಾಟಕ ರಾಜ್ಯ ವೈದ್ಯಾಧಿಕಾರಿಗಳ ಸಂಘ ತಿಳಿಸಿದೆ.
ಈ ಹಿಂದೆ ಸಾಮೂಹಿಕ ರಾಜೀನಾಮೆ ನೀಡಿ ಮುಷ್ಕರ ನಡೆಸಿದ ಸಂದರ್ಭದಲ್ಲಿ ಸರ್ಕಾರ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿತ್ತಾದರೂ ಈವರೆಗೂ ಯಾವುದೊಂದು ಬೇಡಿಕೆಯನ್ನು ಈಡೇರಿಸಿಲ್ಲ ಎಂದು ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘದ ಅಧ್ಯಕ್ಷ ಡಾ.ಎಚ್.ಎನ್.ರವೀಂದ್ರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಕೇವಲ ಮೌಖಿಕವಾಗಿ ಭರವಸೆ ನೀಡಿದ್ದ ಸರ್ಕಾರ ಇದೀಗ ಫೆ.10ರೊಳಗಾಗಿ ಅಧಿಕೃತವಾಗಿ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿರುವ ಅವರು, ತಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದ್ದಲ್ಲಿ ಫೆ.15ರಿಂದ ಆಸ್ಪತ್ರೆಗಳಲ್ಲಿ ಸೇವೆಗೆ ತೆರಳುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಅಲ್ಲದೇ, ತಮ್ಮ ಈ ಮುಷ್ಕರದಿಂದಾಗಿ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಿರಲು ಖಾಸಗಿ ಸೇವೆ ಪ್ರಾರಂಭಿಸುವುದಾಗಿ ಅವರು ಈ ಸಂದರ್ಭದಲ್ಲಿ ಹೇಳಿದರು.