ಬೆಳಗಾವಿ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿಗೆ ತಾನು ಬದ್ಧ ಎಂದು ಹೇಳಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್, ರಾಜ್ಯ ಸರ್ಕಾರ ಮರಾಠಿಗರಿಗೆ ರಕ್ಷಣೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
ಎರಡೂ ರಾಜ್ಯಗಳ ನಡುವಣ ಗಡಿ ವಿವಾದ ಕುರಿತಂತೆ ಸದ್ಯಕ್ಕೆ ಮಾತನಾಡುವುದು ತಪ್ಪು. ಈ ವಿವಾದ ಸೌಹಾರ್ದಯುತವಾಗಿ ಬಗೆಹರಿಯಬೇಕಿದೆ ಎಂದು ಹೇಳಿದರು.
ಖಾಸಗಿ ಕಾರ್ಯಕ್ರಮದ ನಿಮಿತ್ತ ನಗರಕ್ಕೆ ಆಗಮಿಸಿದ್ದ ಅವರು ತಮ್ಮನ್ನು ಭೇಟಿಯಾದ ಸುದ್ದಿಗಾರರೊಡನೆ ಮಾತನಾಡಿದರು. ಗಡಿವಿವಾದದ ಬಗ್ಗೆ ಕರ್ನಾಟಕ ರಾಜ್ಯ ತನ್ನ ಅಭಿಪ್ರಾಯ ಹೇಳಿದೆ. ಅದೇ ರೀತಿ ಮಹಾರಾಷ್ಟ್ರ ಕೂಡ ಸುಪ್ರೀಂಕೋರ್ಟ್ಗೆ ತನ್ನ ಅಭಿಪ್ರಾಯ ತಿಳಿಸಿದೆ. ಆದರೂ ಈ ವಿವಾದದ ಕುರಿತಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪಿಗೆ ಬದ್ದವಾಗಿರುತ್ತೇವೆ ಎಂದರು.
ಅಲ್ಲದೇ ಬೆಳಗಾವಿಯಲ್ಲಿರುವ ಮರಾಠಿಗರ ಭಾವನೆಯನ್ನು ರಾಜ್ಯ ಸರ್ಕಾರ ಗೌರವಿಸಬೇಕು ಎಂದಿರುವ ಚವಾಣ್, ಬೆಳಗಾವಿಯಲ್ಲಿನ ಮರಾಠಿಗರಿಗೆ ಸರ್ಕಾರ ರಕ್ಷಣೆ ನೀಡಬೇಕು ಎಂದು ಹೇಳಿದರು.
ಚವಾಣ್ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು: ರಾಜ್ಯದಲ್ಲಿ ಎಲ್ಲಾ ವರ್ಗದವರೂ ಸುಭಿಕ್ಷವಾಗಿದ್ದಾರೆ. ಆದರೆ ಮಹಾರಾಷ್ಟ್ರ ಮುಖ್ಯಮಂತ್ರಿ ಚವಾಣ್ ಅನಾವಶ್ಯಕವಾಗಿ ರಾಜ್ಯದಲ್ಲಿ ಮರಾಠಿಗರಿಗೆ ರಕ್ಷಣೆ ನೀಡಬೇಕು ಎಂದು ಪುಕ್ಕಟ್ಟೆ ಸಲಹೆ ನೀಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ರಾಜ್ಯದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಇದ್ದಾರೆ. ಚವಾಣ್ ಪದೇ, ಪದೇ ಗಡಿವಿವಾದದ ಕುರಿತು ಪ್ರಸ್ತಾಪಿಸುವ ಅಗತ್ಯವಿಲ್ಲ ಎಂದು ಹೇಳಿದರು.