ಜ್ವರದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ, ಅವರಿಗೆ ಹೃದಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ ಎಂದು ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಸ್ಪಷ್ಟಪಡಿಸಿದ್ದಾರೆ.
ನಿರಂತರ ಕಾರ್ಯಕ್ರಮಗಳು ಮತ್ತು ಪ್ರವಾಸ ಕೈಗೊಂಡಿದ್ದರಿಂದ ಡಸ್ಟ್ ಅಲರ್ಜಿ ಉಂಟಾಗಿ ಕುಮಾರಸ್ವಾಮಿ ಅವರಿಗೆ ಕಳೆದ ಒಂದು ತಿಂಗಳಿನಿಂದ ಸುಮಾರು ಐದಾರು ಬಾರಿ ಜ್ವರ ಕಾಣಿಸಿಕೊಂಡಿತ್ತು. ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಮತ್ತೆ ಪ್ರವಾಸ ಮಾಡುತ್ತಿದ್ದರು. ವಿಶ್ರಾಂತಿ ಇಲ್ಲದ ಕಾರಣ ಅವರಿಗೆ ಪದೇ,ಪದೇ ಜ್ವರ ಬರುತ್ತಿತ್ತು. ಎರಡು ವರ್ಷಗಳ ಹಿಂದೆ ಹೃದಯದ ವಾಲ್ವ್ ಬದಲಾವಣೆ ಮಾಡಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವಿವರಿಸಿದ್ದಾರೆ.
ಈ ಚಿಕಿತ್ಸೆ ನಾಲ್ಕೈದು ದಿನಗಳವರೆಗೆ ಮುಂದುವರಿಯಲಿದೆ. ಕನಿಷ್ಟ ಹದಿನೈದು ದಿನಗಳ ಕಾಲ ಅವರು ವಿಶ್ರಾಂತಿ ತೆಗೆದುಕೊಳ್ಳಬೇಕಾಗಿದೆ ಎಂದು ತಿಳಿಸಿದ್ದಾರೆ. ಸೋಮವಾರ ತೀವ್ರವಾಗಿ ಜ್ವರ ಏರಿದ್ದರಿಂದ ಕೂಡಲೇ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿರುವ ಕುಮಾರಸ್ವಾಮಿ, ಹೃದಯಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.