ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಮತ್ತು ಚರ್ಚ್,ಮಸೀದಿಗಳಿಗೆ ಪೂರ್ಣ ಪ್ರಮಾಣದಲ್ಲಿ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ ಬೆನ್ನಲ್ಲೇ, ಮಂಡ್ಯದ ಮಳವಳ್ಳಿಯಲ್ಲಿ ಕ್ಯಾಥೋಲಿಕ್ ಚರ್ಚ್ವೊಂದರ ಮೇಲೆ ದುಷ್ಕೃರ್ಮಿಗಳು ದಾಂಧಲೆ ನಡೆಸಿದ ಘಟನೆ ನಡೆದಿದೆ.
ಮಳವಳ್ಳಿಯ ಕ್ಯಾಥೋಲಿಕ್ ಚರ್ಚ್ವೊಂದರ ಒಳನುಗ್ಗಿದ ಕಿಡಿಗೇಡಿಗಳು ಬುಧವಾರ ರಾತ್ರಿ ಪೀಠೋಪಕರಣಗಳನ್ನು ಧ್ವಂಸಗೊಳಿಸಿದ್ದಾರೆ. ಈ ಬಗ್ಗೆ ಮಳವಳ್ಳಿಯ ಪಟ್ಟಣಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆದರೆ ಇದು ಚರ್ಚ್ ಮೇಲೆ ದಾಳಿ ನಡೆದ ಪ್ರಕರಣ ಅಲ್ಲ ಎಂದು ಪೊಲೀಸರು ತಿಳಿಸಿದ್ದು, ಕಳ್ಳತನಕ್ಕಾಗಿ ಈ ದುಷ್ಕೃತ್ಯ ನಡೆಸಿರಬೇಕೆಂದು ಪೊಲೀಸ್ ವರಿಷ್ಠಾಧಿಕಾರಿ ಕೌಶಲೇಂದ್ರ ಕುಮಾರ್ ತಿಳಿಸಿದ್ದಾರೆ.
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.