ಬಿಜೆಪಿ ಮುಖಂಡ ವಿ.ಸೋಮಣ್ಣ ಅವರನ್ನು ಮೇಲ್ಮನೆಗೆ ನಾಮನಿರ್ದೇಶನ ಮಾಡಲು ನಿರಾಕರಿಸಿರುವ ರಾಜ್ಯಪಾಲ ಹಂಸರಾಜ ಭಾರದ್ವಾಜ್ ಅವರ ನಿಲುವಿಗೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ರಾಜ್ಯಪಾಲರು ರಾಜೀನಾಮೆ ನೀಡಿ, ರಾಜಕೀಯಕ್ಕೆ ಇಳಿಯಲಿ ಎಂದು ಆಹ್ವಾನ ನೀಡುತ್ತಿರುವುದಾಗಿ ಕಿಡಿಕಾರಿದ್ದಾರೆ.
ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿಗೆ ಗುರುವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು,ಸೋಮಣ್ಣ ಅವರ ಹೆಸರನ್ನು ತಿರಸ್ಕರಿಸುವ ಮೂಲಕ ರಾಜ್ಯಪಾಲರು ಸಕ್ರಿಯ ರಾಜಕಾರಣಕ್ಕೆ ಮರಳಿದ್ದಾರೆ ಎಂದು ದೂರಿದರು. ರಾಜ್ಯಪಾಲರು ತಮ್ಮ ಹುದ್ದೆಗೆ ತಕ್ಕಂತೆ ನಿಷ್ಪಕ್ಷಪಾತವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯಪಾಲ ಭಾರದ್ವಾಜ್ ಅವರು ಕಾಂಗ್ರೆಸ್ ಪಕ್ಷದ ಋಣವನ್ನು ತೀರಿಸುತ್ತಿದ್ದಾರೆ ಎಂದ ಈಶ್ವರಪ್ಪ, ಅವರು ಪ್ರತಿಯೊಂದು ವಿಷಯಕ್ಕೂ ಕಾಂಗ್ರೆಸ್ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂದು ಜನರೇ ಮಾತಾಡಿಕೊಳ್ಳುತ್ತಿದ್ದಾರೆ ಎಂದು ಹೇಳಿದರು.
ಅಲ್ಲದೇ, ಚರ್ಚ್ ದಾಳಿ ಕುರಿತಂತೆ ನೇಮಕಗೊಂಡ ಆಯೋಗದ ವರಿಷ್ಠ ನ್ಯಾಯಮೂರ್ತಿ ಬಿ.ಕೆ.ಸೋಮಶೇಖರ್ ಅವರು ಕಾಂಗ್ರೆಸ್ ಮತ್ತು ವಿದೇಶಿ ಪಾದ್ರಿಗಳ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ದೂರಿದರು.