ಗ್ರಾಮ ಸಭೆಗಳಿಗೆ ಗೈರು ಹಾಜರಾಗುವ ಅಧಿಕಾರಿಗಳನ್ನು ಅಮಾನತು ಮಾಡುವುದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.
ಗ್ರಾಮ ಸಭೆಗಳು ಪಾರದರ್ಶಕವಾಗಿ ನಡೆದರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಆದರೆ ಹೆಚ್ಚಿನ ಬಾರಿ ಅಧಿಕಾರಿಗಳೇ ಸಭೆಗೆ ಗೈರು ಹಾಜರಾಗುತ್ತಿರುವುದರಿಂದ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂದು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರಿಗೆ ಹೇಳಿದರು.
ಮುಂದಿನ ತಿಂಗಳಲ್ಲಿ ರಾಜ್ಯದ ವಿವಿಧ ಕಡೆ ಗ್ರಾಮಸಭೆಗಳು ನಡೆಯಲಿದ್ದು, ಆ ಸಭೆಗಳಿಗೆ ತಾವು ದಿಢೀರ್ ಭೇಟಿ ನೀಡಿ ಸಭೆಗಳು ಹೇಗೆ ನಡೆಯುತ್ತಿವೆ ಎಂಬುದನ್ನು ಖುದ್ದಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.