ರಾಜ್ಯದಲ್ಲಿ ನಡೆದಿರುವ ಚರ್ಚ್ ದಾಳಿಯ ಕುರಿತು ವಿಚಾರಣೆ ನಡೆಸಲು ನೇಮಕಗೊಂಡಿರುವ ನ್ಯಾ.ಸೋಮಶೇಖರ ನೇತೃತ್ವದ ಆಯೋಗ ನೀಡಿರುವ ಮಧ್ಯಂತರ ವರದಿ ಹಿಂದೆ ಹಿಂದೂ ವಿರೋಧಿಗಳ ಕೈವಾಡ ಇರುವುದಾಗಿ ಶ್ರೀರಾಮಸೇನೆ ವರಿಷ್ಠ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.
ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು,ನ್ಯಾಯಮೂರ್ತಿ ಸೋಮಶೇಖರ್ ಅವರು ವರದಿಯನ್ನು ನೇರವಾಗಿ ಸರ್ಕಾರಕ್ಕೆ ಸಲ್ಲಿಸುವ ಬದಲು, ಅದರ ಅಂಶಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡುವ ಮೂಲಕ ನಿಯಮವನ್ನು ಉಲ್ಲಂಘಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಚರ್ಚ್ ದಾಳಿ ಕುರಿತು ವಿಚಾರಣೆ ನಡೆಸಿದ ಆಯೋಗ ಹಿಂದೂ ವಿರೋಧಿಗಳ ಕೈವಾಡದಂತೆ ನಡೆದುಕೊಂಡಿದೆ ಎಂದು ದೂರಿದ ಮುತಾಲಿಕ್, ಶಿಷ್ಟಾಚಾರದಂತೆ ಮಧ್ಯಂತರ ವರದಿಯನ್ನು ಸರ್ಕಾರಕ್ಕೆ ಒಪ್ಪಿಸಬೇಕಿತ್ತು. ಆದರೆ ಅವರು ಆ ಕುರಿತು ಮಾಧ್ಯಮಗಳಿಗೆ ವಿವರಣೆ ನೀಡಿರುವುದು ಸರಿಯಲ್ಲ ಎಂದರು.
ಅಲ್ಲದೇ, ಸಂಘಪರಿವಾರವನ್ನೇ ಮುಖ್ಯ ಗುರಿಯಾಗಿಟ್ಟುಕೊಂಡು, ಬಜರಂಗದಳ, ಆರ್ಎಸ್ಎಸ್, ವಿಎಚ್ಪಿ ಹಾಗೂ ಶ್ರೀರಾಮಸೇನೆಯನ್ನು ನಿಷೇಧಿಸಬೇಕೆಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ನಮ್ಮ ಸಂಘಟನೆ ಸಮಾಜ ವಿರೋಧಿ ಕೃತ್ಯದಲ್ಲಿ ತೊಡಗಿಲ್ಲ. ಚರ್ಚ್ ದಾಳಿಯ ಹಿಂದೆ ರಾಜಕೀಯ ಪಿತೂರಿ ಅಡಗಿದೆ ಎಂದು ಈ ಸಂದರ್ಭದಲ್ಲಿ ಹೇಳಿದರು.