ರಾಜ್ಯದ ವಿವಿಧೆಡೆ ನಡೆದ ಚರ್ಚ್, ಪ್ರಾರ್ಥನಾ ಮಂದಿರದ ದಾಳಿ ಪ್ರಕರಣದ ಹಿಂದೆ ವಿರೋಧ ಪಕ್ಷಗಳ ಕೈವಾಡ ಇದೆ ಎಂದು ಆರೋಪಿಸಿರುವ ಗೃಹ ಸಚಿವ ವಿ.ಎಸ್.ಆಚಾರ್ಯ, ರಾಜ್ಯದಲ್ಲಿ ಮರುಕಳಿಸುತ್ತಿರುವ ಚರ್ಚ್ ದಾಳಿಯಲ್ಲಿ ಬಜರಂಗದಳದ ಕೈವಾಡ ಇಲ್ಲ ಎಂದು ತಿಳಿಸಿದ್ದಾರೆ.
ಮೈಸೂರು ರಸ್ತೆಯಲ್ಲಿರುವ ಸಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ಸಿಬ್ಬಂದಿ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಿದ್ದು, ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
2008ರಲ್ಲಿ ರಾಜ್ಯದ 14ಜಿಲ್ಲೆಗಳಲ್ಲಿ ನಡೆದ ಚರ್ಚ್ ದಾಳಿ ಪ್ರಕರಣ ಕುರಿತಂತೆ ಆಯೋಗ ನೀಡಿರುವ ವರದಿಯನ್ನು ಆಧರಿಸಿ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಅಲ್ಲದೇ, ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಯಾವುದೇ ಹಿಂದೇಟು ಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ನ್ಯಾಯಮೂರ್ತಿ ಸೋಮಶೇಖರ್ ಆಯೋಗ ಸಲ್ಲಿಸಿರುವ ವರದಿಯಲ್ಲಿ ಬಜರಂಗದಳದ ಬಗ್ಗೆ ಉಲ್ಲೇಖವಾಗಿಲ್ಲ ಎಂದರು. ಆಡಳಿತಾರೂಢ ಬಿಜೆಪಿ ಸರ್ಕಾರದ ಅಭಿವೃದ್ಧಿಯನ್ನು ಸಹಿಸದೆ, ಸರ್ಕಾರದ ವಿರುದ್ಧ ವ್ಯವಸ್ಥಿತ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.