ಬಳ್ಳಾರಿಯ ಅಕ್ರಮ ಗಣಿಗಾರಿಕೆ ಕುರಿತಂತೆ ಸರ್ಕಾರಕ್ಕೆ ವರದಿ ನೀಡಿ ಒಂದೂವರೆ ವರ್ಷವಾದರೂ ಅದರ ಬಗ್ಗೆ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅವರು ನಗರದಲ್ಲಿ ಶುಕ್ರವಾರ ಪತ್ರಕರ್ತ ಪ್ರತಾಪ್ ಸಿಂಹ ಅವರ ಮೈನಿಂಗ್ ಮಾಫಿಯಾ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಲೋಕಾ ಯುಕ್ತ ನೀಡಿರುವ ವರದಿಯನ್ನು ಆಂಧ್ರಪ್ರದೇಶ, ಕೇಂದ್ರ ಸರ್ಕಾರ ಹಾಗೂ ಉನ್ನತ ಮಟ್ಟದ ಸಮಿತಿಯೂ ಒಪ್ಪಿಕೊಂಡಿದೆ. ಆದರೆ, ರಾಜ್ಯ ಸರ್ಕಾರ ವರದಿಯನ್ನು ಅನುಷ್ಠಾನಗೊಳಿಸಲು ಹಿಂದೇಟು ಹಾಕುತ್ತಿರುವುದು ಯಾಕೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಹೇಳಿದರು.
ಸರ್ಕಾರಕ್ಕೆ ಲೋಕಾಯುಕ್ತ ವರದಿಯ ಬಗ್ಗೆ ಬೆಲೆಯೇ ಇಲ್ಲ ಎಂಬಂತಾಗಿದ್ದು, ವರದಿ ಅನುಷ್ಠಾನಗೊಳ್ಳದಿರುವುದು ದೊಡ್ಡ ದುರಂತ ಎಂದು ಬೇಸರ ವ್ಯಕ್ತಪಡಿಸಿದರು.