ವಿಧಾನಸಭೆ ಅಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ದಾಂಧಲೆ ನಡೆಸಿದ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲು ಏಕಪಕ್ಷೀಯವಾಗಿ ಸದನ ಸಮಿತಿ ರಚಿಸಲಾಗಿದ್ದು, ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ರೇವಣ್ಣ ಅವರು ಸಭಾಧ್ಯಕ್ಷರನ್ನು ಒತ್ತಾಯಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನ ಸಮಿತಿ ರಚಿಸುವ ಮುನ್ನ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಕೆಲಸವನ್ನು ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅವರು ಮಾಡಿಲ್ಲ ಎಂದು ದೂರಿದರು.
ಸಭಾಧ್ಯಕ್ಷರ ಆಯ್ಕೆ ಸಂದರ್ಭದಲ್ಲಿ ನಡೆದ ಘಟನೆಗೆ ಸಭಾನಾಯಕ ಯಡಿಯೂರಪ್ಪ ಹಾಗೂ ಕೆಲವು ಸಚಿವರು ಪ್ರಚೋದನೆ ನೀಡಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಲು ಕಾರಣವಾಗಿದೆ ಎಂದರು. ಆದ್ದರಿಂದ ಆಡಲಿತ ಮತ್ತು ವಿರೋಧ ಪಕ್ಷಗಳ ಸದಸ್ಯರ ವಿರುದ್ಧವೂ ತನಿಖೆ ನಡೆಸಬೇಕು ಎಂದರು.