ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಕಪ್ಪುಬಾವುಟ ಹಿಡಿದು ನಡುರಸ್ತೆಯಲ್ಲಿ ತಡೆದ ಪರಿಣಾಮ ಗಲಿಬಿಲಿಗೊಂಡ ವೈದ್ಯಕೀಯ ಶಿಕ್ಷಣ ಸಚಿವ ರಾಮಚಂದ್ರಗೌಡ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ಇಚ್ಚೆಯನ್ನು ಅರ್ಧಕ್ಕೆ ಕೈಬಿಟ್ಟು ಬೆಂಗಳೂರಿಗೆ ವಾಪಸಾದ ಘಟನೆ ಸೋಮವಾರ ನಡೆದಿದೆ.
ಇಲ್ಲಿನ ಸರ್ಕಾರಿ ಬಾಲಕರ ಕಾಲೇಜಿನ ಶತಮಾನೋತ್ಸವ ಸಮಾರಂಭಕ್ಕೆ ಆಗಮಿಸಿದ್ದ ಸಚಿವರನ್ನು ಕಾರಿನಿಂದ ಇಳಿಯಲು ಬಿಡದೆ ಕಪ್ಪುಬಾವುಟ ಪ್ರದರ್ಶಿಸುತ್ತಾ ಬೆಳಗಾವಿಯಲ್ಲಿ ಎಂಇಎಸ್ ಸಮಾವೇಶ ನಡೆಸಲು ಅವಕಾಶ ಮಾಡಿಕೊಟ್ಟ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಕ್ಷಣಾ ವೇದಿಕೆ ಕಾರ್ಯಕರ್ತರು ಪಟ್ಟು ಬಿಡದ ಪರಿಣಾಮ ಸಚಿವರಿಗೆ ಕಾರಿನಿಂದ ಇಳಿಯಲು ಬಿಡಲಿಲ್ಲ. ಬೇರೆ ದಾರಿ ಕಾಣದೆ ಸಚಿವ ರಾಮಚಂದ್ರ ಗೌಡರು ಕಾರ್ಯಕ್ರಮದಲ್ಲಿ ಭಾಗವಹಿಸದೆ ಬೆಂಗಳೂರಿಗೆ ವಾಪಸ್ಸಾಗಿದ್ದರು. ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಸುಮಾರು 20ಕ್ಕೂ ಹೆಚ್ಚು ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.