ಕಳೆದ 18 ತಿಂಗಳಲ್ಲಿ 40ಸಾವಿರ ಕೋಟಿ ರೂ.ಗಳನ್ನು ಸಾಲ ಮಾಡಿರುವುದೇ ರಾಜ್ಯ ಬಿಜೆಪಿ ಸರ್ಕಾರದ ಮಹಾನ್ ಸಾಧನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ರೇವಣ್ಣ ವ್ಯಂಗ್ಯವಾಡಿದ್ದಾರೆ.
ಚನ್ನರಾಯಪಟ್ಟಣದ ರಸ್ತೆ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ವಿದ್ಯುತ್ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು.
ವಿದ್ಯುತ್ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸಲು ಸಾಧ್ಯವಾಗದೆ ಪಲಾಯನ ಮಾಡಿದ ಕೆ.ಎಸ್.ಈಶ್ವರಪ್ಪ ದೇವೇಗೌಡರ ಬಗ್ಗೆ ಮಾತನಾಡಬೇಕಿಲ್ಲ ಎಂದು ರೇವಣ್ಣ ತಮ್ಮ ತಂದೆಯನ್ನು ಈ ಹಿಂದೆ ತರಾಟೆಗೆ ತೆಗೆದುಕೊಂಡ ಈಶ್ವರಪ್ಪನವರ ವಿರುದ್ಧ ಕಿಡಿಕಾರಿದರು.
ರಾಜ್ಯದಲ್ಲಿ ಬಿಜೆಪಿಗೆ ಪುನರ್ಜನ್ಮ ನೀಡಿದ್ದು ಎಚ್.ಡಿ.ಕುಮಾರಸ್ವಾಮಿ ಎಂಬುದನ್ನು ಈಶ್ವರಪ್ಪ ನೆನೆಯಲಿ ಎಂದು ರೇವಣ್ಣ ಸಹೋದರನನ್ನು ಈ ಸಂದರ್ಭದಲ್ಲಿ ಹೊಗಳಿದರು.