ಮಾಜಿ ಸಚಿವೆ ಶೋಭಾ ಕರಂದ್ಲಾಜೆಗೆ ಪಕ್ಷದ ರಾಷ್ಟ್ರೀಯ ಸಂಘಟನೆಯಲ್ಲಿ ಉನ್ನತ ಹುದ್ದೆ ನೀಡಲು ಬಿಜಿಪಿ ಕಸರತ್ತು ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ರೆಡ್ಡಿ ಸಹೋದರರ ಬಂಡಾಯದಿಂದಾಗಿ ಸಚಿವ ಸ್ಥಾನ ಕಳೆದುಕೊಂಡ ಶೋಭಾ ಬಗ್ಗೆ ಬಿಜೆಪಿ ಹೈಕಮಾಂಡ್ ಉತ್ತಮ ಭಾವನೆ ಹೊಂದಿದ್ದು, ರಾಷ್ಟ್ರೀಯ ಕಾರ್ಯದರ್ಶಿ ಹುದ್ದೆ ನೀಡಲು ಚಿಂತಿಸಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಂಡಾಯ ಸಾರಿದ್ದ ರೆಡ್ಡಿ ಸಹೋದರರು ಹಾಗೂ ಶಾಸಕ ರೇಣುಕಾಚಾರ್ಯ ಶೋಭಾ ಅವರನ್ನು ಸಂಪುಟದಿಂದ ಕೈಬಿಡುವಂತೆ ಆಗ್ರಹಿಸಿದ್ದರು. ಒತ್ತಡಕ್ಕೆ ಮಣಿದ ಯಡಿಯೂರಪ್ಪ ಶೋಭಾ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿದ್ದರು.
ನಂತರ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿದ ಶೋಭಾ ತಾವು ಸಂಪುಟ ತೊರೆದ ಕಾರಣ ಹಾಗೂ ಸಚಿವರಾಗಿ ಮಾಡಿದ ಸಾಧನೆಗಳನ್ನು ವಿವರಿಸಿದ್ದಾರೆ. ಪಕ್ಷದ ಆಂತರಿಕ ಭಿನ್ನಮತಕ್ಕೆ ಬಲಿಪಶುವಾದ ಶೋಭಾಗೆ ರಾಷ್ಟ್ರ ಮಟ್ಟದಲ್ಲಿ ಸ್ಥಾನ ಕಲ್ಪಿಸಲು ನೂತನ ಅಧ್ಯಕ್ಷರು ಚಿಂತಿಸಿದ್ದಾರೆ.