ತನ್ನ ವೈಫಲ್ಯಗಳಿಗೆ ಕೇಂದ್ರ ಸರ್ಕಾರವನ್ನು ದೂರುವುದನ್ನೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೆಟ್ಟ ಚಾಳಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಕಾರ್ಮಿಕ ಸಚಿವ ಮಲ್ಲಿಕಾರ್ಜುನ ಖರ್ಗೆ ಗಂಭೀರವಾಗಿ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕೇವಲ ಆರೋಪ, ಪ್ರತ್ಯಾರೋಪಗಳಲ್ಲೇ ಕಾಲಹರಣ ಮಾಡುತ್ತಿದೆ ಎಂದು ಟೀಕಿಸಿದರು.
ರೈತರಿಗೆ ಮತ್ತು ಜನಸಾಮಾನ್ಯರಿಗೆ ನಿರಂತರವಾಗಿ ವಿದ್ಯುತ್ ಕೊಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳಿರುವುದು ಬಿಜೆಪಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಎಷ್ಟು ಸಾವಿರ ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿದೆ ಎಂಬುದನ್ನು ಬಹಿರಂಗಪಡಿಸಬೆಕು ಎಂದು ಅವರು ಆಗ್ರಹಿಸಿದರು.
ರಾಜ್ಯದಲ್ಲಿ ಚರ್ಚ್ಗಳ ಮೇಲೆ ದಾಳಿ ಮುಂದುವರಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲೂ ರಾಜ್ಯಸರ್ಕಾರ ವಿಫಲವಾಗಿದೆ ಎಂದು ಖರ್ಗೆ ಈ ಸಂದರ್ಭದಲ್ಲಿ ದೂರಿದರು.