ಪರ-ವಿರೋಧದ ನಡುವೆಯೂ ರಾಜ್ಯ ಸರ್ಕಾರ ಕೊನೆಗೂ ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾನೂನು ಜಾರಿಗೆ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ರಾಜ್ಯದಲ್ಲಿ ಗೋ ಹತ್ಯೆ ನಿಷೇಧಕ್ಕೆ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಈ ನಿಷೇಧ ಕೈಗೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಇನ್ನು ಮುಂದೆ ಅಕ್ರಮವಾಗಿ ಜಾನುವಾರು ಸಾಗಣೆ ಮಾಡುವಂತಿಲ್ಲ. ಗೋ ಹತ್ಯೆ ಮಾಡಿದವರು ಒಂದು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗಲಿದೆ ಎಂದು ಸಚಿವ ಸಂಪುಟ ಸಭೆ ಮುಕ್ತಾಯದ ನಂತರ ಗೃಹ ಸಚಿವ ವಿ.ಎಸ್.ಆಚಾರ್ಯ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಅಲ್ಲದೇ, ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನ ಫೆಬ್ರುವರಿ 25-26ರಂದು ನಡೆಯಲಿದ್ದು, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಮಾರ್ಚ್ 5ರಿಂದ ಬಜೆಟ್ ಅಧಿವೇಶನ ನಡೆಯಲಿದೆ ಎಂದರು.
ನಾಗರಿಕರಿಗೆ ಯೂನಿಕ್ ಐಡೆಂಟಿಟಿ ಕಾರ್ಡ್(ವಿಶಿಷ್ಟ ಗುರುತು ಚೀಟಿ ಪತ್ರ) ನೀಡುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ 15ಮಂದಿ ಸದಸ್ಯರ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಆಚಾರ್ಯ ತಿಳಿಸಿದ್ದಾರೆ.