ಕಬ್ಬು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ಮಕ್ಕಳು ಸೇರಿದಂತೆ ಒಂಬತ್ತು ಮಂದಿ ಸಾವನ್ನಪ್ಪಿರುವ ದುರ್ಘಟನೆ ಬುಧವಾರ ಇಂಡಿ ಬಳಿ ಸಂಭವಿಸಿದೆ.
ಇಲ್ಲಿನ ಏಳಗಿಯಿಂದ ಚಡಚಣಕ್ಕೆ ಕಬ್ಬನ್ನು ಸಾಗಿಸುತ್ತಿದ್ದ ಲಾರಿಯೊಂದು ತಿರುವಿನಲ್ಲಿ ಪಲ್ಟಿ ಹೊಡೆದಾಗ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಸ್ಗಾಗಿ ಕಾಯುತ್ತಿದ್ದ ಮೂರು ಮಂದಿಗೆ ಡಿಕ್ಕಿ ಹೊಡೆದು ಲಾರಿ ಪಲ್ಟಿ ಹೊಡೆದಿತ್ತು. ಇದರಿಂದಾಗಿ ಮೂರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಲಾರಿಯಡಿ ಸಿಲುಕಿ ಆರು ಮಂದಿ ಸಾವನ್ನಪ್ಪಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಬ್ಬು ಸಾಗಿಸುತ್ತಿದ್ದ ಲಾರಿಯಲ್ಲಿ ಇಪ್ಪತ್ತು ಮಂದಿ ಕೂಲಿಯಾಳುಗಳಿದ್ದು, ಅದರಲ್ಲಿ ಆರು ಮಂದಿ ಸಾವನ್ನಪ್ಪಿದ್ದು, ಉಳಿದವರು ಗಂಭೀರವಾಗಿ ಗಾಯಗೊಂಡಿದ್ದು, ಕೆಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿಯಡಿಯಲ್ಲಿ ಸಿಲುಕಿರುವವರನ್ನು ಹೊರ ತೆಗೆಯಲು ಸ್ಥಳೀಯರು ಶ್ರಮಿಸುತ್ತಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನೆಯಲ್ಲಿ ಏಳಗಿಯ ಶಾರದಾ, ಸುನಿಲ್, ಶಾರದಾ ಮೇತ್ರಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದ್ದು, ಇನ್ನುಳಿದವರ ವಿವರ ಲಭ್ಯವಾಗಿಲ್ಲ. ಸ್ಥಳಕ್ಕೆ ಝಳಕಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.