ಸಹಕಾರಿ ಕ್ಷೇತ್ರದ ಧುರೀಣ ದಿವಂಗತ ಕೆ.ಎಚ್.ಪಾಟೀಲ್ ಅವರ ಪ್ರತಿಮೆಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನ ಮಾಡಿದ್ದ ಘಟನೆಯಿಂದ ಪಾಟೀಲ್ ಅಭಿಮಾನಿಗಳು ರೊಚ್ಚಿಗೆದ್ದ ಪರಿಣಾಮ ಗದಗ ಸೇರಿದಂತೆ ಹಲವು ಪ್ರದೇಶಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಗುರುವಾರ ರಾತ್ರಿ ಇಲ್ಲಿನ ಹುಲಕೋಟಿಯಲ್ಲಿರುವ ಕೆ.ಎಚ್.ಪಾಟೀಲ್ ಪ್ರತಿಮೆಗೆ ಚಪ್ಪಲಿ ಹಾರ ತೂಗು ಹಾಕಿರುವ ಘಟನೆ ಸ್ಥಳೀಯರಿಗೆ ತಿಳಿಯುತ್ತಿದ್ದಂತೆಯೇ ಪರಿಸ್ಥಿತಿ ಉದ್ವಿಗ್ನಗೊಂಡಿತ್ತು. ಶುಕ್ರವಾರ ಬೆಳಿಗ್ಗೆ ಪರಿಸ್ಥಿತಿ ತೀವ್ರ ಹಿಂಸಾಚಾರಕ್ಕೆ ತಿರುಗಿದ್ದು, ಆರು ಬಸ್ಗಳಿಗೆ ಬೆಂಕಿ ಹಚ್ಚಲಾಗಿದೆ. ಅಲ್ಲದೇ ಪೊಲೀಸ್ ವಾಹನವೊಂದಕ್ಕೂ ಕೂಡ ಬೆಂಕಿ ಹಚ್ಚಿರುವ ಘಟನೆ ನಡೆದಿದೆ.
ಪಾಟೀಲ್ ಪ್ರತಿಮೆಗೆ ಚಪ್ಪಲಿ ಹಾರ ಹಾಕಿ ಅವಮಾನ ಮಾಡಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಮೂರು ದಿನಗಳ ಕಾಲ ನಿಷೇಧಾಜ್ಞೆ ಹೇರಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಎನ್.ವಿ.ಪ್ರಸಾದ್ ತಿಳಿಸಿದ್ದಾರೆ.
ಗುರುವಾರ ಸಂಜೆ ಶ್ರೀರಾಮಸೇನೆಯ ವರಿಷ್ಠ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದಿರುವ ಘಟನೆಗೆ ಪ್ರತಿಯಾಗಿ ಶ್ರೀರಾಮಸೇನೆ ಕಾರ್ಯಕರ್ತರೇ ಈ ಕೃತ್ಯವನ್ನು ಎಸಗಿರುವುದಾಗಿ ಕಾಂಗ್ರೆಸ್ ಗಂಭೀರವಾಗಿ ಆರೋಪಿಸಿದೆ.