ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷಗಳು ತಕರಾರು ಮಾಡುತ್ತಿದ್ದು, ವೋಟ್ ಬ್ಯಾಂಕ್ ರಾಜಕಾರಣ ಮಾಡಲು ಸಜ್ಜಾಗಿವೆ ಎಂದು ಗೃಹ ಸಚಿವ ಡಾ.ವಿ.ಎಸ್.ಆಚಾರ್ಯ ಕಿಡಿಕಾರಿದ್ದಾರೆ.
ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ಸುಖಾಸುಮ್ಮನೆ ರಾಜಕೀಯ ಪ್ರೇರಿತ ನಿಲುವುಗಳಿಗೆ ಅಂಟಿಕೊಳ್ಳುತ್ತಿವೆ ಎಂದು ಆರೋಪಿಸಿದರು.
ಗೋ ಸಂರಕ್ಷಣೆಗೆ ನಾಯಕತ್ವ ವಹಿಸಿಕೊಳ್ಳಬೇಕಾದ ಮಾಜಿ ಪ್ರಧಾನಿ ದೇವೇಗೌಡರೇ ಗೋ ಹತ್ಯೆಗೆ ಮುಂದಾಗಿದ್ದಾರೆ ಎಂದು ಗೋ ಹತ್ಯೆ ನಿಷೇಧ ಕಾಯ್ದೆಗೆ ವಿರೋಧ ವ್ಯಕ್ತಪಡಿಸಿದ ಗೌಡರ ವಿರುದ್ಧ ಆಚಾರ್ಯ ಹರಿಹಾಯ್ದರು.
ಹಿಂದೆ ದನಕರು ಗುರುತನ್ನು ಹೊಂದಿದ್ದ ಕಾಂಗ್ರೆಸ್ ಇದೀಗ ಗೋ ಹತ್ಯೆ ನಿಷೇಧ ಕಾಯ್ದೆಗೆ ವಿರೋಧ ವ್ಯಕ್ತಪಡಿಸುತ್ತಿದೆ. ಅಲ್ಲದೆ ನಾವು ಈ ಕಾಯ್ದೆಯನ್ನು ಸಂವಿಧಾನದ ಚೌಕಟ್ಟಿನೊಳಗೆ ಜಾರಿಗೊಳಿಸಲು ಉದ್ದೇಶಿಸಿರುವುದಾಗಿ ಸ್ಪಷ್ಟಪಡಿಸಿದರು.