ದೇಶದ ಪ್ರತಿಯೊಬ್ಬ ಪ್ರಜೆಗೆ ಗುರುತಿನ ಚೀಟಿ ನೀಡಲು ಅಗತ್ಯವಾದ ಮಾಹಿತಿ ಸಂಗ್ರಹಣೆ ಕೆಲಸ ಅಗಸ್ಟ್ನಿಂದ ಪ್ರಾರಂಭಗೊಳ್ಳಲಿದೆ ಎಂದು ರಾಷ್ಟ್ರೀಯ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ ನಿಲೇಕಣಿ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದೇಶದ ಪ್ರತಿಯೊಬ್ಬ ನಾಗರಿಕರಿಗೂ ಮುಂದಿನ ಐದು ವರ್ಷಗಳಲ್ಲಿ ಗುರುತಿನ ಚೀಟಿ ವಿತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ನೋಂದಣಿ ಕೇಂದ್ರಗಳನ್ನು ತೆರೆದು ಅಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತದೆ. ಇದಕ್ಕಾಗಿ ತಂತ್ರಜ್ಞಾನದಲ್ಲಿಯೂ ಸಾಕಷ್ಟು ಸುಧಾರಣೆ ಮಾಡಲಾಗುತ್ತಿದೆ. ಅಲ್ಲದೆ, ಗುರುತಿನ ಚೀಟಿ ಬಂದ ಬಳಿಕ ಪಡಿತರ ಚೀಟಿಯ ವಿತರಣೆಯಲ್ಲಿ ಸಾಕಷ್ಟು ಬದಲಾವಣೆ ತರಲಾಗುತ್ತದೆ ಎಂದು ಅವರು ಮಾಹಿತಿ ನೀಡಿದರು.
ಸರ್ಕಾರದ ಯೋಜನೆಗಳು ಹಾಗೂ ಅದಕ್ಕೆ ಬಳಕೆಯಾಗುತ್ತಿರುವ ಹಣ ಸರಿಯಾಗಿ ವಿತರಣೆಯಾಗುವುದು ಇಂದಿನ ಅಗತ್ಯವಾಗಿದ್ದು, ಈ ದೃಷ್ಟಿಯಿಂದ ಗುರುತಿನ ಚೀಟಿ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.