ಬಿಟಿ ಬದನೆಗೆ ಯೋಜನೆ ಜಾರಿಗೆ ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರೈತರ ಹಿತಕ್ಕಾಗಿ ಅಧಿಕಾರ ತ್ಯಾಗಕ್ಕೂ ಸಿದ್ದ ಎಂದು ಹೇಳಿದ್ದಾರೆ.
ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಗಳು ಜಂಟಿಯಾಗಿ ಆಯೋಜಿಸಿದ್ದ ಪ್ರೊ.ನಂಜುಂಡಸ್ವಾಮಿ ಅಮೃತ ಮಹೋತ್ಸವ ಆಚರಣೆ ಉದ್ಘಾಟಿಸಿ ಮಾತನಾಡಿದ ಅವರು, ರೈತರು ನಡೆಸುತ್ತಿರುವ ಹೋರಾಟಕ್ಕೆ ಸರ್ಕಾರದ ಬೆಂಬಲ ಇದೆ ಎಂದರು.
ನಾನು ರೈತರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದೇನೆ. ಯಾವುದೇ ಕಾರಣಕ್ಕೂ ರೈತರ ಬದುಕಿಗೆ ಕೊಳ್ಳಿ ಇಡುವ ಕೆಲಸಕ್ಕೆ ಮುಂದಾಗಲಾರೆ. ಒಂದು ವೇಳೆ ಅಂತಹ ಸಂದರ್ಭ ಬಂದರೆ ಅಧಿಕಾರ ತ್ಯಾಗಕ್ಕೂ ಸಿದ್ದ ಎಂದರು. ಅಲ್ಲದೇ ಈ ಬಾರಿಯ ಬಜೆಟ್ನಲ್ಲಿ ರೈತರಿಗೆ ಅನುಕೂಲವಾಗುವಂಥ ಕಾರ್ಯಕ್ರಮಗಳಿಗೆ ಹೆಚ್ಚಿನ ಗಮನ ನೀಡಲಾಗುವುದು ಎಂದು ಭರವಸೆ ನೀಡಿದರು.