ರಾಜ್ಯದಲ್ಲಿ ಚರ್ಚ್, ಪ್ರಾರ್ಥನಾ ಮಂದಿರಗಳ ಮೇಲಿನ ದಾಳಿಯನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ದೂರಿರುವ ಕೇಂದ್ರ ಕಾನೂನು ಸಚಿವ ಎಂ.ವೀರಪ್ಪ ಮೊಯ್ಲಿ, ಆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕೋಮುಗಲಭೆ ನಿಯಂತ್ರಣ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಚಿಂತನೆ ನಡೆಸುತ್ತಿರುವುದಾಗಿ ಹೇಳಿದರು.
ಈ ಸಂಬಂಧ ಸದ್ಯದಲ್ಲೇ ಸಂಸತ್ತಿನಲ್ಲಿ ಮಸೂದೆ ಮಂಡಿಸಲಾಗುವುದು ಎಂದ ಅವರು, ಈ ಮಸೂದೆ ಜಾರಿಯಾದ ನಂತರ ಕೋಮುಗಲಭೆ ಹತ್ತಿಕ್ಕುವಲ್ಲಿ ವಿಫಲವಾದ ರಾಜ್ಯಗಳನ್ನೇ ಹೊಣೆ ಮಾಡಲಾಗುವುದು ಎಂದರು. ಅವರು ಇಲ್ಲಿನ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಕೋಮುಗಲಭೆ ಪ್ರಕರಣಗಳು ಹೆಚ್ಚುತ್ತಿದ್ದು, ಅದನ್ನು ಹತ್ತಿಕ್ಕುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುದು ಅತ್ಯಂತ ಕಳವಳದ ವಿಷಯ. ಕಾನೂನು ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಯಾರಿಗೂ ಅವಕಾಶ ನೀಡಬಾರದು ಮೊಯ್ಲಿ ಈ ಸಂದರ್ಭದಲ್ಲಿ ಸಲಹೆ ನೀಡಿದರು.