ನೈಸ್ ವಿವಾದ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ನೈಸ್ ಮುಖ್ಯಸ್ಥ ಅಶೋಕ್ ಖೇಣಿ ಮತ್ತು ಸಿಎಂ ಅವಳಿ-ಜವಳಿ ಎಂದು ಕಿಡಿಕಾರಿದ್ದಾರೆ.
ನೈಸ್ ಯೋಜನೆಯ ವ್ಯಾಪ್ತಿಯಲ್ಲಿ ನನ್ನ ಕುಟುಂಬದ ಒಂದಿಂಚೂ ಜಮೀನಿಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿರುವ ಅವರು, ನೈಸ್ ಯೋಜನೆಯ ವ್ಯಾಪ್ತಿಯಲ್ಲಿ ನನ್ನ ಜಮೀನು ಇದ್ದರೆ ನಿರ್ದಾಕ್ಷಿಣ್ಯವಾಗಿ ಸರ್ಕಾರ ವಶಪಡಿಸಿಕೊಳ್ಳಲಿ ಎಂದು ಸವಾಲು ಹಾಕಿದರು.
ಅಲ್ಲದೇ, ಮುಖ್ಯಮಂತ್ರಿಗಳು ನನ್ನ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ ಖೇಣಿ ಕೇಳಿದ್ದಕ್ಕಿಂತ ಹೆಚ್ಚಿನ ಭೂಮಿಯನ್ನು ನೈಸ್ ಯೋಜನೆಗೆ ಮುಖ್ಯಮಂತ್ರಿಗಳು ನೀಡುತ್ತಿದ್ದಾರೆ ಎಂದು ದೂರಿದರು.
ರಸ್ತೆ ನಿರ್ಮಿಸುವ ನೆಪದಲ್ಲಿ ಸಾವಿರಾರು ಬಡ ರೈತರ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುತ್ತಿರುವ ಅಶೋಕ್ ಖೇಣಿಗೆ ಸರ್ಕಾರ ತಲೆಬಾಗಿದೆ ಎಂದು ಆಪಾದಿಸಿದರು. ರೈತರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಕಾಳಜಿ ಇದ್ದರೆ ಭೂಸ್ವಾಧೀನ ವಿರೋಧಿಸಿ ಜೆಡಿಎಸ್ ನಡೆಸಲಿರುವ ಪ್ರತಿಭಟನಾ ಸಭೆಯಲ್ಲಿ ಪಾಲ್ಗೊಳ್ಳಲಿ ಎಂದು ಆಹ್ವಾನ ನೀಡಿದರು.