ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪರಿಣಾಮಕಾರಿ ಪ್ರಣಾಳಿಕೆ ರೂಪಿಸುವ ಸಿದ್ಧತೆಯಲ್ಲಿ ತೊಡಗಿವೆ.
ಬಿಬಿಎಂಪಿಯ ಅಧಿಕಾರದ ಗದ್ದುಗೆಯನ್ನು ಹಿಡಿಯಲು ಆಡಳಿತಾರೂಢ ಬಿಜೆಪಿ ಈಗಾಗಲೇ ಬಜೆಟ್ನಲ್ಲಿ ಬೆಂಗಳೂರು ನಗರಕ್ಕೆ ಯೋಜನೆಯನ್ನು ಪ್ರಕಟಿಸಿದೆ. ತನ್ನ ಪ್ರಣಾಳಿಕೆಯಲ್ಲಿ ಇನ್ನಷ್ಟು ಯೋಜನೆಗಳನ್ನು ಪ್ರಕಟಿಸುವ ಮೂಲಕ ಮತದಾರರನ್ನು ಬುಟ್ಟಿಗೆ ಹಾಕಿಕೊಳ್ಳುವ ಪ್ರಯತ್ನ ನಡೆಸಲಿವೆ.
ಕಳೆದ ಬಾರಿ ಅಧಿಕಾರದ ಗದ್ದುಗೆ ಹಿಡಿದಿದ್ದ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ಬಿಟ್ಟುಕೊಡುವ ಇಷ್ಟವಿಲ್ಲ. ಹಾಗಾಗಿ ಹೇಗಾದರೂ ಮಾಡಿ ಮತದಾರರನ್ನು ಒಲಿಸಿಕೊಂಡು ಅಧಿಕಾರದ ಗದ್ದುಗೆ ಏರುವ ಹವಣಿಕೆಯಲ್ಲಿದೆ.
ಮಾಜಿ ಪ್ರಧಾನಿ ದೇವೇಗೌಡ ಅವರ ಜೆಡಿಎಸ್ ಪಕ್ಷವು ಕೂಡ ಪ್ರಣಾಳಿಕೆ ಸಿದ್ದತೆಯಲ್ಲಿ ತೊಡಗಿದೆ. ಎರಡು ಮೂರು ದಿನಗಳಲ್ಲಿ ಈ ಮೂರು ಪಕ್ಷಗಳು ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡುವ ಸಾಧ್ಯತೆಗಳಿವೆ.