ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ಇನ್ನೂ ಎರಡು ಲಕ್ಷ ಮನೆಗಳನ್ನು ನಿರ್ಮಿಸಿಕೊಡಲು ನೆರವಾಗುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ದೆಹಲಿಯಲ್ಲಿ ಮಂಗಳವಾರ ಕೇಂದ್ರ ಗೃಹ ಸಚಿವ ಚಿದಂಬರಂ ಮತ್ತು ಹಣಕಾಸು ಸಚಿವ ಪ್ರಣಬ್ ಮುಖರ್ಜಿ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರಿಗೆ ಇನ್ನೂ 2ಲಕ್ಷ ಮನೆ ನಿರ್ಮಿಸಿಕೊಡಲು ಆರ್ಥಿಕ ನೆರವು ನೀಡಬೇಕೆಂದು ಕೋರಲಾಯಿತು. ನಮ್ಮ ಬೇಡಿಕೆಗೆ ಸಚಿವರಿಂದ ಸಕಾರಾತ್ಮಕ ಸ್ಪಂದನ ದೊರೆತಿದೆ ಎಂದು ಅವರು ತಮ್ಮ ಅಧಿಕೃತ ನಿವಾಸದಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ನೆರೆ ಸಂತ್ರಸ್ತರಿಗೆ ಐದು ಲಕ್ಷ ಮನೆಗಳ ನಿರ್ಮಾಣ ಅಗತ್ಯವಿದೆ ಎಂಬ ಅಂಶವನ್ನು ಮತ್ತೊಮ್ಮೆ ಕೇಂದ್ರ ಸಚಿವರಿಗೆ ಮನವರಿಕೆ ಮಾಡಿಕೊಡಲಾಯಿತು ಎಂದರು.
ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದ್ದರೂ ಅದಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಕೇಂದ್ರದ ನೆರವು ಬಿಡುಗಡೆಯಾಗಿಲ್ಲ ಎಂಬುದರ ಬಗ್ಗೆ ಕೇಂದ್ರ ಗೃಹ ಸಚಿವರ ಗಮನಕ್ಕೆ ತರಲಾಯಿತು ಎಂದು ಈ ಸಂದರ್ಭದಲ್ಲಿ ಹೇಳಿದರು.