ಉತ್ತರ ಕರ್ನಾಟಕದ ನೆರೆ ಸಂತ್ರಸ್ತರ ಬಗ್ಗೆ ಸರ್ಕಾರ ನಿರ್ಲಕ್ಷ್ಯ ತೋರಿಸಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಜನಪ್ರತಿನಿಧಿಗಳಿಗೆ ಒದೆಯಿರಿ ಎಂದು ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ತೀವ್ರವಾಗಿ ಆಕ್ಷೇಪ ವ್ಯಕ್ತಪಡಿಸಿದೆ.
ಉನ್ನತ ಸ್ಥಾನ ಅಲಂಕರಿಸಿರುವವರು ಈ ರೀತಿ ಮಾತನಾಡುವುದು ಶೋಭೆ ತರುವುದಿಲ್ಲ. ಇದು ಖಂಡನೀಯ ಎಂದು ಬಿಜೆಪಿ ವಕ್ತಾರ ಅಯನೂರು ಮಂಜುನಾಥ್ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಬಳಸಿರುವ ಭಾಷೆ ಅವರ ಘನತೆಗೆ ತಕ್ಕದಲ್ಲ. ಹತಾಶೆಯಿಂದ ಅವರು ಈ ರೀತಿ ಬಾಯಿಗೆ ಬಂದ ಹಾಗೆ ಮಾತನಾಡಿಕೊಳ್ಳುತ್ತಿದ್ದಾರೆಂದು ಎಂದು ದೂರಿದರು.
ನೆರೆ ಪರಿಹಾರ ಕಾರ್ಯಗಳಿಗೆ ಸುಮಾರು 2000 ಕೋಟಿ ರೂ.ಗಳನ್ನು ಖರ್ಚು ಮಾಡಲಾಗಿದೆ. ಹಳ್ಳಿಗಳ ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ. ಇಷ್ಟೆಲ್ಲಾ ಆದರೂ ಏನೂ ಆಗಿಲ್ಲ ಎನ್ನುವ ರೀತಿಯಲ್ಲಿ ಕುಮಾರಸ್ವಾಮಿ ಮಾತನಾಡುವುದು ಸರಿಯಲ್ಲ ಎಂದವರು ಹೇಳಿದ್ದಾರೆ.
ಪ್ರಸ್ತುತ ಬಿಜೆಪಿ ಸರ್ಕಾರದ ಸಾಧನೆಯಿಂದ ಕಂಗೆಟ್ಟಿರುವ ಜೆಡಿಎಸ್ ಚುನಾವಣೆಗಳಲ್ಲಿ ಸೋತಿದೆ. ಈ ನಿಟ್ಟಿನಲ್ಲಿ ಇಂತಹ ಪ್ರಚೋದನಕಾರಿ ಹೇಳಿಕೆಗಳಿಂದ ಜನರನ್ನು ಉದ್ರೇಕಿಸುತ್ತಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.