ತನ್ನ ಸ್ನೇಹಿತ ಮೇಲೆ ಅತ್ಯಾಚಾರವೆಸಗಿರುವ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳ ಹಾಲಪ್ಪ ಅವರ ಪ್ರಕರಣವನ್ನು, ಸಿಬಿಐಗೆ ಒಪ್ಪಿಸಬೇಕೆಂದು ಕರ್ನಾಟಕ ಮಾನವ ಹಕ್ಕುಗಳ ಆಯೋಗ ಸರ್ಕಾರಕ್ಕೆ ಆದೇಶ ಹೊರಡಿಸಿದೆ.
ಈ ಸಂಬಂಧ ಹರತಾಳ ಹಾಲಪ್ಪ ತನ್ನ ಸ್ನೇಹಿತನ ಪತ್ನಿ ಮೇಲೆ ಮಾಡಿರುವ ಅತ್ಯಾಚಾರ ವರದಿ, ನಂತರದ ಘಟನೆಗಳ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲು ಮಾಡಿಕೊಂಡಿದ್ದ ಆಯೋಗ ಈ ಆದೇಶ ನೀಡಿದೆ.
ಅಲ್ಲದೆ, ಈ ಕುರಿತು ರಾಜ್ಯದ ಮುಖ್ಯ ಕಾರ್ಯದರ್ಶಿಗೆ ನೀಡಿದ್ದ ನೋಟಿಸ್ಗೆ ಅವರು ತೃಪ್ತಿಕರ ಹಾಗೂ ಸಮಂಜಸವಾದ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಹಾಗೂ ಪ್ರಕರಣದ ತೀವ್ರತೆ ಅರಿತು ತನಿಖೆಯನ್ನು ಸಿಬಿಐಗೆ ಒಪ್ಪಿಸಲು ಆದೇಶಿಸಿರುವುದಾಗಿ ಆಯೋಗದ ಅಧ್ಯಕ್ಷರಾದ ನ್ಯಾಯಮೂರ್ತಿ ಎಸ್.ಆರ್. ನಾಯಕ್ ಆದೇಶದಲ್ಲಿ ಸ್ಪಷ್ಟಪಡಿಸಿದ್ದಾರೆ.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದರೂ ಈ ಸಂಸ್ಥೆಯಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವೇ ಎನ್ನುವ ಅನುಮಾನ ಕಾಡಿದೆ. ತನಿಖೆ ಆರಂಬಿಸುವ ಮುನ್ನವೇ ಆರೋಪಿಯ ರಕ್ಷಣೆಗೆ ರಾಜ್ಯ ಸರ್ಕಾರ ಮುಂದೆ ಬಂದಿರುವುದು ಈ ಅನುಮಾನಕ್ಕೆ ಕಾರಣವಾಗಿದೆ ಎಂದಿದ್ದಾರೆ.