ನಿಗಮ ಮಂಡಳಿಗಳಿಗೆ ನೇಮಕ ಹಾಗೂ ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಸದ್ಯಕ್ಕೆ ಚಿಂತನೆ ನಡೆಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಸಚಿವ ಸಂಪುಟದಲ್ಲಿ ಎರಡು ಸ್ಥಾನಗಳು ಖಾಲಿಯಿದ್ದು, ಸೂಕ್ತ ಸಮಯ ಬಂದಾಗ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ಉಹಾಪೋಹದ ವರದಿಗಳ ರಂಜನೆ ಬೇಡ ಎಂದು ಕಿವಿಮಾತು ಹೇಳಿದರು.
ಜನಪ್ರತಿನಿಧಿಗಳನ್ನು ಒದೆಯಿರಿ ಎಂದು ಹೇಳಿಕೆ ನೀಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ತಮ್ಮ ಘನತೆಗೆ ತಕ್ಕಂತೆ ವರ್ತಿಸುವುದು ಸೂಕ್ತ. ಮಾಜಿ ಮುಖ್ಯಮಂತ್ರಿಗಳಾಗಿ, ಸಂಸದರಾಗಿ ಕಾರ್ಯನಿರ್ವಹಿಸುತ್ತಿರುವವರು ಯೋಚಿಸಿ ಮಾತನಾಡಬೇಕು ಎಂದು ಕಿಡಿಕಾರಿದರು.
ಮನಬಂದಂತೆ ವರ್ತಿಸಿದಲ್ಲಿ, ಮುಂಬರುವ ಚುನಾವಣೆಗಳಲ್ಲಿ ಜನತೆ ತಕ್ಕ ಪಾಠ ಕಲಿಸಲಿದ್ದಾರೆ. ಅವರ ಬಗ್ಗೆ ಹೆಚ್ಚಿಗೆ ಮಾತನಾಡುವ ಅವಶ್ಯಕತೆಯಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯಪಾಲರು ಹಾಗೂ ರೆಡ್ಡಿ ಸಹೋದರರ ಮಧ್ಯದ ವಿವಾದ ಉಲ್ಬಣಗೊಂಡಿಲ್ಲ. ಅಂತಹ ಪರಿಸ್ಥಿತಿ ಬಂದಾಗ ಅದರ ಬಗ್ಗೆ ವಿಚಾರ ಮಾಡೋಣ ಎಂದು ಹೇಳಿದ್ದಾರೆ.
ವಿಮಾನ ದುರಂತದಲ್ಲಿ ಮೃತರಾದ ಕುಟುಂಬಗಳಿಗೆ ಸರಕಾರ ತನ್ನಿಂದಾದ ನೆರವು ನೀಡಲು ಸಿದ್ಧವಿದೆ. ಆತಂಕಪಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಭರವಸೆ ನೀಡಿದ್ದಾರೆ.