ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಗೆ ಹುಚ್ಚು ಹಿಡಿದು ಬಿಟ್ಟಿದೆ, ಪಾಪ ಬಿಬಿಎಂಪಿ, ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ನೆಲಕಚ್ಚಿದ್ದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ಸಚಿವ ಕರುಣಾಕರ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಅವರು ಇಲ್ಲಿ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ, ಜವಾಬ್ದಾರಿ ಸ್ಥಾನದಲ್ಲಿದ್ದವರು ಈ ರೀತಿ ಮಾತನಾಡುವುದು ಅವರ ಘನತೆಗೆ ಶೋಭೆ ತರುವುದಿಲ್ಲ ಎಂದರು. ಕುಮಾರಸ್ವಾಮಿ ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಜೆಡಿಎಸ್ ರಾಜ್ಯದಲ್ಲಿ ಸಂಪೂರ್ಣವಾಗಿ ನೆಲಕಚ್ಚಿದೆ, ಅಲ್ಲದೇ ಬಿಬಿಎಂಪಿ, ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿಯೂ ಜೆಡಿಎಸ್ ಹೆಸರಿಲ್ಲದೆ ಸೋತು ಹೋಗಿದೆ. ಹಾಗಾಗಿ ತಲೆಕೆಟ್ಟವರಂತೆ ಕುಮಾರಸ್ವಾಮಿ ಮಾತನಾಡುತ್ತಿದ್ದಾರೆ. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಕಿಡಿಕಾರಿದರು.
ಉತ್ತರ ಕರ್ನಾಟಕದಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ನಿರ್ಲಕ್ಷ್ಯ ತೋರಿಸಿದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ, ಉತ್ತರ ಕರ್ನಾಟಕದ ಜನತೆ ಮೃದು ಧೋರಣೆ ತಾಳದೆ ಜನಪ್ರತಿನಿಧಿಗಳಿಗೆ ಒದ್ದು ಬುದ್ದಿ ಹೇಳಬೇಕು ಎಂದು ಹೇಳಿಕೆ ನೀಡಿದ್ದರು.