ಭ್ರಷ್ಟಾಚಾರ ಮತ್ತು ಡಿನೋಟಿಫಿಕೇಶನ್ಗೆ ಸಂಬಂಧಿಸಿದಂತೆ ಬಹಿರಂಗ ಚರ್ಚೆಗೆ ಸಿದ್ಧ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎನ್.ಧರಂಸಿಂಗ್ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರ ಸವಾಲಿಗೆ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಸ್ಥಳ, ದಿನ ಮತ್ತು ಸಮಯ ಅವರೇ ನಿಗದಿ ಮಾಡಲಿ. ಮುಕ್ತ ಚರ್ಚೆಯೂ ನಡೆಯಲಿ. ತೀರ್ಪು ನಾಡಿನ ಜನತೆಗೆ ಬಿಡೋಣ ಎಂದು ಹೇಳಿದರು.
ಗುಲ್ಬರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನ್ನ ಮತ್ತು ಎಸ್.ಎಂ.ಕೃಷ್ಣ ಅಧಿಕಾರಾವಧಿಯಲ್ಲಿ ವೈಯಕ್ತಿಕ ಹಿತಾಸಕ್ತಿಗಾಗಿ ಡಿನೋಟಿಫೈ ಮಾಡಲಿಲ್ಲ. ಸಾರ್ವಜನಿಕ ಹಿತಾಸಕ್ತಿ ಹಿನ್ನೆಲೆಯಲ್ಲಿ ಮಾಡಲಾಗಿತ್ತು. ಆದರೆ ಯಡಿಯೂರಪ್ಪ ತಮ್ಮ ಕುಟುಂಬದ ಸದಸ್ಯರು, ಸಂಬಂಧಿಕರಿಗೆ ನೆರವಾಗಲು ಡಿನೋಟಿಫೈ ಮಾಡಿದ್ದಾರೆ ಎಂದು ಟೀಕಿಸಿದರು.
ಭ್ರಷ್ಟಾಚಾರ ಆರೋಪ ಬರುತ್ತಿದ್ದಂತೆ ಯಡಿಯೂರಪ್ಪ ಸಂಪುಟದ ಅನೇಕ ಮಂತ್ರಿಗಳು ರಾಜೀನಾಮೆ ನೀಡಿದ್ದು ಯಾಕೆ? ಆದರೂ ಕೇಂದ್ರ ಬಿಜೆಪಿ ವರಿಷ್ಠರು ಯಡಿಯೂರಪ್ಪ ನಾಯಕತ್ವದ ಗುಣಗಾನ ಮಾಡುತ್ತಿರುವುದು ವಿಷಾದನೀಯ ಎಂದರು.