ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಜ್ಯ ಸುದ್ದಿ » ನನ್ನ ತೇಜೋವಧೆ ಮಾಡ್ಬೇಡಿ: ಸಿಎಂಗೆ ಎಸ್.ಎಂ.ಕೃಷ್ಣ ಪತ್ರ (S M Krishna | land issue | Yeddyurappa | hitting letter | denotification)
ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ 2203.30 ಎಕರೆ ಪ್ರದೇಶವನ್ನು ಸಾರ್ವಜನಿಕ ಉದ್ದೇಶಕ್ಕಾಗಿಯೇ ಡಿ ನೋಟಿಫೈ ಮಾಡಿದ್ದೇನೆ. ಆದರೆ, ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಆಧಾರ ರಹಿತ ಮತ್ತು ಸತ್ಯಕ್ಕೆ ದೂರವಾದುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ಅವರು ಬರೆದಿರುವ ಪತ್ರದಲ್ಲಿ ಈ ರೀತಿ ಸ್ಪಷ್ಟನೆ ನೀಡಿದ್ದಾರೆ.
ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದ ಪ್ರತಿಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಜಿ ಸಚಿವರಾದ ಪ್ರೊ.ಬಿ.ಕೆ.ಚಂದ್ರಶೇಖರ್ ಮತ್ತು ರಾಣಿ ಸತೀಶ್ ಅವರು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು.
ನನ್ನ ಅವಧಿಯಲ್ಲಿ ಧಾರ್ಮಿಕ ಉದ್ದೇಶ, ಹೊರ ವರ್ತುಲ ರಸ್ತೆ, ಶಿಕ್ಷಣ ಕಟ್ಟಡಗಳು, ಜಲ ಮಂಡಳಿಯು ಕೈಗೆತ್ತಿಗೊಳ್ಳುವ ಸಾರ್ವಜನಿಕ ಉದ್ದೇಶಗಳಿಗಾಗಿ ಈ ಭೂಮಿಯನ್ನು ಡಿನೋಟಿಫೈ ಮಾಡಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಡಿನೋಟಿಫೈ ವಿಚಾರದಲ್ಲಿ ನನ್ನ ವಿರುದ್ಧ ನೀವು ಆಧಾರರಹಿತವಾದ ಆರೋಪಗಳನ್ನು ಮಾಡುವ ಮೂಲಕ ನನ್ನ ತೇಜೋವಧೆಗೆ ಪ್ರಯತ್ನ ಮಾಡಿದ್ದೀರಿ. ಅಲ್ಲದೇ ಸಭೆ, ಸಮಾರಂಭಗಳಲ್ಲೂ ಈ ವಿಷಯ ಪ್ರಸ್ತಾಪಿಸುವ ನಿಮ್ಮ ಕ್ರಮ ಸರಿಯಲ್ಲ ಎಂದು ಅವರು ಮುಖ್ಯಮಂತ್ರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಡಿನೋಟಿಫೈ ಪ್ರಕರಣದ ಬಗ್ಗೆ ನಾನು ಮುಖ್ಯಮಂತ್ರಿಯಾಗಿದ್ದಾಗಲೇ ಸದನದಲ್ಲೇ ಸ್ಪಷ್ಟನೆ ನೀಡಿದ್ದೇನೆ. ಸತ್ಯವನ್ನು ಮರೆಮಾಚಿ ಸುಳ್ಳನ್ನು ಸಾರ್ವಜನಿಕವಾಗಿ ಹೇಳುವ ಮೂಲಕ ನನ್ನ ವರ್ಚಸ್ಸಿಗೆ ಧಕ್ಕೆ ಬರುವಂತೆ ವರ್ತಿಸಿದ್ದೀರಿ ಎಂದು ಅವರು ಆರೋಪಿಸಿದ್ದಾರೆ. ನಾನು ನಿಮಗೆ ಬರೆದಿರುವ ಪತ್ರ ನಿಮ್ಮ ಅನುಮಾನಗಳನ್ನು ಪರಿಹರಿಸುತ್ತದೆ ಎಂದು ನಾನು ನಂಬಿದ್ದೇನೆ ಎಂದು ಮುಖ್ಯಮಂತ್ರಿಗೆ ಬರೆದ ಪತ್ರದಲ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.